ಗೂಡಂಗಡಿಗಳಿಗೆ ವಿದ್ಯುತ್ ಸಂಪರ್ಕ ನೀಡಿದ್ರೆ ಎಫ್ಐ ಆರ್

KannadaprabhaNewsNetwork |  
Published : Dec 03, 2025, 01:04 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್   | Kannada Prabha

ಸಾರಾಂಶ

ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಗೂಡಂಗಡಿಗಳಳಿಗೆ ವಿದ್ಯುತ್ ಸಂಪರ್ಕ ನೀಡಿದರೆ ಬೆಸ್ಕಾಂ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾ, ಹೆದ್ದಾರಿಗಳ ಇಕ್ಕೆಲಗಳು, ಬೈಪಾಸ್ ರಸ್ತೆಗಳು ಸೇರುವ ಸ್ಥಳ ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಗಳ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಗೂಡಂಗಡಿಗಳನ್ನು ಹಾಕಿಕೊಂಡಿರುವುದರಿಂದ, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ, ಅಲ್ಲದೆ ಅಪಘಾತಗಳಿಗೂ ಕಾರಣವಾಗುತ್ತಿವೆ ಎಂದರು.

ಹಿರಿಯೂರು ನಗರದಲ್ಲಿ ಬೈಪಾಸ್ ರಸ್ತೆಯ ಅಕ್ಕಪಕ್ಕದಲ್ಲಿ ಹೆಚ್ಚಿನ ಗೂಡಂಗಡಿಗಳು ಇದ್ದು, ಇಲ್ಲಿ ಸಾಲು ಸಾಲಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಅಲ್ಲದೆ ಟೋಲ್ ಸಂಗ್ರಹಿಸುವ ಕಡೆಗಳಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳ ಬಗ್ಗೆ ಮಾಹಿತಿ ಪಡೆದು, ಈ ಅಂಗಡಿಗಳು ನಿರ್ಮಿಸಿರುವ ಸ್ಥಳ ಯಾರಿಗೆ ಸೇರಿದ್ದು, ಕೃಷಿಯೇತರ ಭೂಮಿಯಾಗಿ ಪರಿವರ್ತಿಸಲಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಬೆಸ್ಕಾಂ ಇಲಾಖೆ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳಿಗೆ ಒದಗಿಸಿರುವ ವಿದ್ಯುತ್ ಸಂಪರ್ಕವನ್ನು ತ್ವರಿತವಾಗಿ ಕಡಿತಗೊಳಿಸಬೇಕು. ವಿರೋಧ ಕಂಡುಬಂದಲ್ಲಿ, ಪೊಲೀಸ್ ಬಂದೋಬಸ್ತ್ ಪಡೆದು ಕೂಡಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆ ನಾಲ್ಕನೆ ಸ್ಥಾನದಲ್ಲಿದೆ. ಈ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಅಪಘಾತಗಳ ಸಂಖ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಹಲವು ಬಾರಿ ಸಭೆಗಳಲ್ಲಿ ಸಲಹೆ, ಸೂಚನೆಗಳನ್ನು ನೀಡಿದರೂ ಪಾಲನೆ ಮಾಡುತ್ತಿಲ್ಲ. ಮತ್ತೆ ಸಭೆ ಸೇರಿದಾಗಲೇ ಈ ಬಗ್ಗೆ ಮಾತನಾಡುತ್ತೀರಿ. ಸಭೆಯಲ್ಲಿ ನಾವೇನು ಭಜನೆ ಮಾಡಲು ಸೇರುತ್ತೇವೆಯೇ ಎಂದು ಅಧಿಕಾರಿಗಳ ನಡೆಗೆ ಅಸಮಾಧಾನ ಹೊರಹಾಕಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ಅಪಘಾತಗಳು ಸಂಭವಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುವಂತಹ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಬೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಸೇರಿದಂತೆ ಆಯಾ ಅಧಿಕಾರಿಗಳನ್ನು ಕೂಡ ಪ್ರತಿವಾದಿಗಳನ್ನಾಗಿ ಮಾಡಿ ಎಫ್‍ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿತ್ರದುರ್ಗ ನಗರದ ವಿವಿಧ ಪ್ರದೇಶಗಳಲ್ಲಿ ಅಪಘಾತ ಸಂಭವಿಸಬಹುದಾದ ತೆರೆದ ಚರಂಡಿಗಳು, ರಾಜಕಾಲುವೆ, ಡ್ರೈನೇಜ್‍ಗಳು, ರಸ್ತೆಯಲ್ಲಿಯೇ ಬೋರ್‍ವೆಲ್ ಮುಂತಾದ ವಿವರಗಳೊಂದಿಗೆ ಫೋಟೋಗಳ ಸಹಿತ ಸಂಚಾರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ವಿಶ್ವನಾಥ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಪಘಾತ ಸಂಭವಿಸಬಹುದಾದ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‍ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. 20 ವರ್ಷ ಮೇಲ್ಪಟ್ಟ ವಾಹನಗಳ ಓಡಾಟ ಇಲ್ಲದಿರುವ ಬಗ್ಗೆ ದೃಢೀಕರಣ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ಡಿವೈಎಸ್‍ಪಿ ಗಳಾದ ದಿನಕರ್, ಶಿವಕುಮಾರ್, ಸತ್ಯನಾರಾಯಣ ರಾವ್ ನಗರಸಭೆ ಪೌರಾಯುಕ್ತೆ ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಗಾಗಿ ಆಗ್ರಹಿಸಿ ಗೋಕಾಕ ಬಂದ್‌ ಇಂದು
ಒಂದೇ ಸಂಸ್ಥೆಯಿಂದ 50 ಜನ ಅಗ್ನಿವೀರರಾಗಿ ಆಯ್ಕೆ