ದೊಡ್ಡಬಳ್ಳಾಪುರ: ಇಲ್ಲಿನ ಮುಕ್ತಾಂಬಿಕಾ ರಸ್ತೆಯ ತಮಿಳ್ನಾಡ್ ಮರ್ಕಂಟೈಲ್ ಬ್ಯಾಂಕ್ನ ನೆಲಮಹಡಿಯಲ್ಲಿದ್ದ ಸೈಕಲ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರುಪಾಯಿ ಮೌಲ್ಯದ ಸೈಕಲ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸೈಕಲ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಣಿಗರಪೇಟೆ ಬಳಿಯ ಕಾಳಮ್ಮ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀಕೃಷ್ಣ ಸ್ಟೋರ್ ಮಾಲೀಕರಿಗೆ ಸೇರಿದ ಗೋದಾಮು ಇದಾಗಿದೆ. ಸೋಮವಾರ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಗೋದಾಮಿನಲ್ಲಿದ್ದ ಸೈಕಲ್ಗಳು ಹಾಗೂ ಇತರೆ ವಸ್ತುಗಳಿಗೆ ವ್ಯಾಪಿಸಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸುಮಾರು 6 ಟ್ಯಾಂಕರ್ಗಳಷ್ಟು ನೀರು ಬಳಸಿದ್ದು, ಬೆಂಕಿ ನಿಯಂತ್ರಣಕ್ಕೆ ತರಲು ಹರಸಾಹಸ ನಡೆಸಿದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.