ಗದುಗಿನ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ಅಪಾರ ಹಾನಿ

KannadaprabhaNewsNetwork |  
Published : Dec 23, 2025, 02:15 AM IST
ಚಿತ್ರಮಂದಿರದಲ್ಲಿ ಬೆಂಕಿ ಹೊತ್ತಿಕೊಂಡಿರುವುದು.  | Kannada Prabha

ಸಾರಾಂಶ

ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸತತ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಗದಗ: ನಗರದ ಎಪಿಎಂಸಿ ರಸ್ತೆಯಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಿತ್ರಮಂದಿರದ ಒಳಾಂಗಣ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸೋಮವಾರ ಮಧ್ಯಾಹ್ನ 12ಕ್ಕೆ ಎಂದಿನಂತೆ ಧುರಂಧರ ಚಲನಚಿತ್ರದ ಪ್ರದರ್ಶನ ಆರಂಭವಾಗಬೇಕಿತ್ತು. ಶೋಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲಿ ಚಿತ್ರಮಂದಿರದ ಒಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಚಿತ್ರಮಂದಿರದ ಒಳಗಿನಿಂದ ದಟ್ಟವಾದ ಹೊಗೆ ಹೊರಬರುವುದನ್ನು ಗಮನಿಸಿದ ಸಿಬ್ಬಂದಿ ಮತ್ತು ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸತತ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಬೆಂಕಿಯ ತೀವ್ರತೆಗೆ ಚಿತ್ರಮಂದಿರದ ಒಳಗಿದ್ದ ಕುರ್ಚಿಗಳು, ಪರದೆಗಳು, ಸೌಂಡ್ ಸಿಸ್ಟಮ್ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ಭಸ್ಮವಾಗಿವೆ.

ಸಿನಿಮಾ ಪ್ರದರ್ಶನ ಆರಂಭವಾಗಲು ಇನ್ನೂ ಸಮಯವಿದ್ದ ಕಾರಣ ಚಿತ್ರಮಂದಿರದ ಒಳಗೆ ಪ್ರೇಕ್ಷಕರು ಇರಲಿಲ್ಲ. ಒಂದು ವೇಳೆ ಸಿನಿಮಾ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದ್ದರೆ ದೊಡ್ಡ ಮಟ್ಟದ ಪ್ರಾಣಹಾನಿಯಾಗುವ ಸಾಧ್ಯತೆಯಿತ್ತು. ಸದ್ಯಕ್ಕೆ ಬೆಂಕಿ ಅವಘಡದಿಂದ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ. ​

ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಹುದ್ದೆ ಬಗ್ಗೆ ರಾಹುಲ್‌ ನಿರ್ಧಾರ ಮಾಡ್ತಾರೆ : ಸಿದ್ದು
ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ