ಕನ್ನಡಪ್ರಭ ವಾರ್ತೆ ಶಿರಾಳಕೊಪ್ಪ
ಭಾನುವಾರ ಮುಂಜಾನೆ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಅಂಗಡಿಯೊಳಗೆ ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆ ಹಾಗೂ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳಿದ್ದ ಹಿನ್ನೆಲೆಯಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಅಂಗಡಿಯ ಬಹುತೇಕ ಭಾಗ ಹಾಗೂ ಒಳಗಿದ್ದ ಸರಕುಗಳು ಸುಟ್ಟುಹೋಗಿವೆ.ರೇಂಜ್ 1 ಅಂಗಡಿ ಸಾಗರ ಮೂಲದ ಫಯಾಜ್ ಎಂಬುವವರಿಗೆ ಸೇರಿದ್ದು, ಮುಂಬರುವ ಈದ್ ಮಿಲಾದ್ ಹಬ್ಬದ ವ್ಯಾಪಾರಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಹೊಸ ಬಟ್ಟೆಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಈ ಸರಕುಗಳೆಲ್ಲ ಬೆಂಕಿಗೆ ಆಹುತಿಯಾಗಿರುವುದರಿಂದ ಉದ್ಯಮಿಗೆ ಭಾರಿ ನಷ್ಟ ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಅಕ್ಕಪಕ್ಕದ ಅಂಗಡಿಗಳು ಹಾಗೂ ಕಟ್ಟಡಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಘಟನೆಯಿಂದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.