ಕುಷ್ಟಗಿ: ತಾಲೂಕು ಮಟ್ಟದ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ.
ಸಮ್ಮೇಳನದ ಯಶಸ್ವಿ ಆಯೋಜನೆಗಾಗಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಸಂಘಟನಾ ಸಿದ್ಧತೆ ಹಾಗೂ ಸಾಹಿತ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
ಚುಟುಕು ಸಾಹಿತ್ಯದ ಬೆಳವಣಿಗೆಗೆ ಉತ್ತೇಜನ ನೀಡುವ ಹಾಗೂ ಹೊಸ ತಲೆಮಾರಿನ ಸಾಹಿತ್ಯಾಸಕ್ತರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸಮ್ಮೇಳನ ಅರ್ಥಪೂರ್ಣವಾಗಿ ಆಯೋಜಿಸಲು ಸಭೆಯಲ್ಲಿ ಒಮ್ಮತ ವ್ಯಕ್ತವಾಯಿತು.ಕೊಪ್ಪಳ ಸೇರಿದಂತೆ ವಿವಿಧ ಭಾಗಗಳ ಕವಿ, ಸಾಹಿತಿ, ಸಾಹಿತ್ಯಾಭಿಮಾನಿಗಳನ್ನು ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ತೀರ್ಮಾನಿಸಲಾಯಿತು. ಸಮ್ಮೇಳನದ ಸವಿನೆನಪಿಗಾಗಿ ವಿಶೇಷ ಕಿರುಹೊತ್ತಿಗೆ ಪ್ರಕಟಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು.
ಡುಂಡಿರಾಜರಿಗೆ ಆಹ್ವಾನ: ಸಮ್ಮೇಳನದ ಉದ್ಘಾಟನೆಗೆ ಖ್ಯಾತ ಸಾಹಿತಿ ಎಚ್.ಡುಂಡಿರಾಜ ಅವರನ್ನು ಆಹ್ವಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರ ಉಪಸ್ಥಿತಿಯಿಂದ ಸಮ್ಮೇಳನಕ್ಕೆ ವಿಶೇಷ ಮೆರುಗು ದೊರೆಯಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ವಿವಿಧ ವಿಷಯಗಳ ಚರ್ಚೆ: ಸಮ್ಮೇಳನದ ಸಂಘಟನೆ, ಅತಿಥಿಗಳ ಆಹ್ವಾನ, ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಸ್ಮರಣ ಸಂಚಿಕೆ ಪ್ರಕಟಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಸಮ್ಮೇಳನ ಯಶಸ್ವಿಯಾಗಿ ನಡೆಸಲು ವಿವಿಧ ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡುವ ಬಗ್ಗೆಯೂ ಅಭಿಪ್ರಾಯ ವ್ಯಕ್ತವಾಯಿತು.
ಈಗಾಗಲೆ ಚುಸಾಪ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರುಗಿದ್ದು ಆಗಸ್ಟ್ ಕೊನೆ ವಾರದಲ್ಲಿ ತಾಲೂಕು ಮಟ್ಟದ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ ಮಾಡಲು ನಿರ್ಣಯ ಮಾಡಲಾಗಿದೆ ಎಂದು ಕುಷ್ಟಗಿ ಚುಸಾಪ ತಾಲೂಕಾಧ್ಯಕ್ಷ ಮಹೇಶ ಹಡಪದ ತಿಳಿಸಿದ್ದಾರೆ.