ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಬ್ಯಾಂಕ್‌ ಪ್ರತಿಭಾ ಪುರಸ್ಕಾರ ವಿತರಣೆ

KannadaprabhaNewsNetwork | Published : Feb 18, 2025 12:34 AM

ಸಾರಾಂಶ

ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ನೆರವೇರಿತು.

ಕನ್ನಡಪ್ರಭ ವಾರ್ತೆ ಕಾಪು

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್‌ಗಳು ಶಾಸಕ ಯಶ್ಪಾಲ್‌ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಗಳಾಗಿ ಮುನ್ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರ ಇನ್ನಷ್ಟು ಶೈಕ್ಷಣಿಕ ಸಾಧನೆಗೆ ಪ್ರೇರಣೆ ನೀಡಲಿ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಕಳೆದ 15 ವರ್ಷಗಳಿಂದ ಫೆಡರೇಶನ್ ನಿರಂತರವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಯ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಸಂಕಲ್ಪ ಮಾಡುವಂತೆ ತಿಳಿಸಿದರು.

ಮಂಗಳೂರು ಮೇಯರ್ ಮನೋಜ್ ಕುಮಾರ್ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ದ.ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷ ಗೌತಮ್ ಕೋಡಿಕಲ್, ಮಂಗಳೂರು ಏಳುಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಮಹಾನಗರ ಪಾಲಿಕೆ ಸದಸ್ಯೆ ನಯನ ಆರ್. ಕೋಟ್ಯಾನ್, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಿಳಾ ಸಂಘದ ಅಧ್ಯಕ್ಷ ಉಷಾರಾಣಿ, ಮಹಾಲಕ್ಷ್ಮೀ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಇದ್ದರು.

ವಿಜೇತ ಶೆಟ್ಟಿ ನಿರೂಪಿಸಿದರು. ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ದರ್ಶನ್ ವಂದಿಸಿದರು.

Share this article