ಯಲಬುರ್ಗಾ: ತಾಲೂಕಿನ ಮಲಕಸಮುದ್ರ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿ ನೀರು ಪಾಲಾಗಿದ್ದ ವಜ್ರಬಂಡಿಯ ಫಕೀರ್ಸಾಬ್ ಮುಜಾವರ, ಗುತ್ತೂರಿನ ಶರಣಪ್ಪ ಎಮ್ಮೇರ್ ಶವಗಳು ಮಂಗಳವಾರ ಪತ್ತೆಯಾಗಿವೆ.
ಕುಟುಂಬಸ್ಥರ ಆಕ್ರಂದನ: ಘಟನೆ ನಡೆದ ದಿನದಿಂದಲೇ ಮೃತ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಗ್ರಾಮಸ್ಥರು ಸ್ಥಳದಲ್ಲಿದ್ದರು. ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಇಬ್ಬರು ಮೃತ ವ್ಯಕ್ತಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರು ಗೋಳಾಡಿ ಅಳುವುದನ್ನು ನೋಡಿದ ಸ್ಥಳದಲ್ಲಿ ನೆರೆದಿದ್ದ ಜನರ ಕಣ್ಣಂಚಲ್ಲಿ ಕಣ್ಣೀರು ತರಿಸಿತು. ಮೀನು ಹಿಡಿಯಲು ಕರೆತಂದ ಮೀನುಗಾರರ ಸಂಘದ ಅಧ್ಯಕ್ಷನ ಮೇಲೆ ಆಕ್ರೋಶ ಹೊರಹಾಕಿದರು.
ಕೆರೆ ಹತ್ತಿರ ಯಲಬುರ್ಗಾ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಿಂದ ಜನತೆ ಆಗಮಿಸಿ ಘಟನೆ ನೆನೆದು ಮರುಗಿದರು. ಮೀನು ಹಿಡಿಯುವ ವೇಳೆ ಮೀನುಗಾರರು ಸುರಕ್ಷಾ ಕವಚ ಧರಿಸಿದ್ದರೆ ಇಂಥ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂದು ಸಾರ್ವಜನಿಕರು ಮಾತಾಡಿಕೊಂಡರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.ಪರಿಹಾರದ ಭರವಸೆ:ಕೆರೆಯಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ಶಾಸಕ ಬಸವರಾಜ ರಾಯರಡ್ಡಿ ಭರವಸೆ ನೀಡಿದರು.
ಘಟನೆ ಸ್ಥಳಕ್ಕೆ ಮಾಜಿ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಮಂಗಳವಾರದಂದು ಶವ ಪತ್ತೆ ವೇಳೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಎಸ್ಪಿ ಡಾ. ರಾಮ್.ಎಲ್. ಅರಸಿದ್ದಿ, ಡಿವೈಎಸ್ಪಿ ಮುತ್ತಣ್ಣ ಸಾವರಗೋಳ, ಸಿಪಿಐ ಮೌನೇಶ್ವರ ಮಾಲಿಪಾಟೀಲ್, ತಹಸೀಲ್ದಾರ್ ಬಸವರಾಜ ತೆನ್ನಳಿ, ತಾಪಂ ಇಒ ನೀಲಗಂಗಾ ಬಬಲಾದ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಮಪ್ಪ, ಪಿಎಸ್ಐಗಳಾದ ವಿಜಯ ಪ್ರತಾಪ, ಎಸ್.ಪಿ. ನಾಯ್ಕ, ಪಿಡಿಒ ವೆಂಕಟೇಶ ನಾಯಕ, ಡಾ. ಶಿವನಗೌಡ ದಾನರಡ್ಡಿ, ಕೆರಿಬಸಪ್ಪ ನಿಡಗುಂದಿ ಸೇರಿದಂತೆ ಮತ್ತಿತರರು ಘಟನಾ ಸ್ಥಳದಲ್ಲಿದ್ದು ಮೃತ ವ್ಯಕ್ತಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದರು.