ಕಾಫಿ ತೋಟವೊಂದರಲ್ಲಿ ಕಾರ್ಮಿಕರ ಸೋಗಿನಲ್ಲಿ ವಾಸ । ಕೇಂದ್ರ ಗುಪ್ತಚರ ಸಂಸ್ಥೆಯಿಂದ ದೊರೆತ ಮಾಹಿತಿ
ಕಾಫಿ ತೋಟದಲ್ಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಕಾರ್ಮಿಕರ ಸೋಗಿನಲ್ಲಿ ವಾಸಿಸುತ್ತಿದ್ದವರನ್ನು ಕೇಂದ್ರ ಗುಪ್ತಚರ ಸಂಸ್ಥೆಯಿಂದ ದೊರೆತ ಮಾಹಿತಿ ಆಧಾರದ ಮೇಲೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ಪ್ರಸ್ತುತ ಐವರನ್ನು ಡಿ.ಆರ್. ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಗುರುತು, ಪೌರತ್ವ ಹಾಗೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಕ್ಕಾಗಿ ಜಿಲ್ಲಾಡಳಿತಕ್ಕೆ ಪೊಲೀಸರು ಮಾಹಿತಿ ರವಾನಿಸಿರುವುದಾಗಿ ತಿಳಿದುಬಂದಿದೆ.ಇದೇ ಜಾಲದಲ್ಲಿ ಇನ್ನೂ ಕೆಲವರು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲಯಲ್ಲಿ ಪೊಲೀಸ್ ಇಲಾಖೆ ವ್ಯಾಪಕ ತನಿಖೆ ಮುಂದುವರಿಸಿದೆ.ಈ ಮಧ್ಯೆ, ಮಲೆನಾಡಿನ ಕಾಫಿ ತೋಟಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂದು ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳು ಈ ಹಿಂದಿನಿಂದಲೂ ಆರೋಪಿಸುತ್ತಿದ್ದು, ಈ ಬಂಧನ ತಮ್ಮ ಆರೋಪಗಳಿಗೆ ಬಲ ನೀಡಿದೆ. ಆದರೆ, ಈ ಸಂಬಂಧ ಪೊಲೀಸ್ ಇಲಾಖೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
-- ಬಾಕ್ಸ್--
ಚಿಕ್ಕಮಗಳೂರು: ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಕರೆ ತಂದ ಏಜೆಂಟರ್ ಹಾಗೂ ಗುತ್ತಿಗೆದಾರರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಐದು ಮಂದಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗರು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಜಿಲ್ಲೆಯಲ್ಲಿ ಬೇರೆ ಬೇರೆ ಜಿಲ್ಲೆ, ರಾಜ್ಯ ಗಳಿಂದ ಆಗಮಿಸಿ ದಿನಗೂಲಿ ಸೇರಿದಂತೆ ಬೇರೆ ಬೇರೆ ವಿಧವಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಾಹಿತಿಯನ್ನು ಆಯಾ ಠಾಣೆ ವ್ಯಾಪ್ತಿಯಲ್ಲಿ ಸಂಗ್ರಹಿಸುವ ವಿಶೇಷ ಕಾರ್ಯಚರಣೆ ನಡೆಸಲಾಗುತ್ತಿದೆ.ಇದೇ ರೀತಿ ಪರಿಶೀಲನೆ ವೇಳೆ ಐದು ಮಂದಿ ಅಕ್ರಮ ಬಾಂಗ್ಲಾದೇಶಿಗರು ನೆಲೆಸಿರುವುದು ಪತ್ತೆಯಾಗಿದೆ. ಅವರನ್ನು ವಿಚಾ ರಣೆಗೆ ಒಳಪಡಿಸಲಾಗಿದೆ. ಅವರ ಬಳಿ ಬಾಂಗ್ಲದೇಶ ಸರ್ಕಾರದಿಂದ ನೀಡಲಾದ ಗುರುತಿನ ಚೀಟಿ ಸಹ ಲಭ್ಯವಾಗಿದೆ. ಇನ್ನು ಎಷ್ಟು ಮಂದಿ ಈ ರೀತಿ ನೆಲೆಸಿದ್ದಾರೆ? ಎಲ್ಲೆಲ್ಲಿ ನೆಲೆಸಿದ್ದಾರೆ ಎಂಬುದರ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ, ಈ ಅಕ್ರಮ ಬಾಂಗ್ಲಾದೇಶಿಗರನ್ನು ಇಲ್ಲಿಗೆ ಕರೆದುಕೊಂಡು ಬಂದ ಏಜೆಂಟ್, ಗುತ್ತಿಗೆದಾರರ ವಿವರನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
(ಜಿತೇಂದ್ರ ಕುಮಾರ್ ದಯಾಮ ಫೋಟೋ ಇದೆ)