ಹಾವೇರಿ: ಪ್ರಸ್ತುತ ಸಕ್ಕರೆ ದರದ ಆಧಾರದ ಮೇಲೆ ಕಬ್ಬಿಗೆ ದರ ನಿಗದಿ ಮಾಡುವ ಮೂಲಕ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮನ್ನು ಪ್ರಾರಂಭ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾವೇರಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ರೈತ ಮುಖಂಡರು ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
2026-27ನೇ ಸಾಲಿನಲ್ಲಿ ಈಗಿನ ಸಕ್ಕರೆ ದರದ ಆಧಾರದ ಮೇಲೆ ಕಬ್ಬಿಗೆ ದರ ನಿಗದಿ ಮಾಡುವ ಮೂಲಕ ಸಂಗೂರು ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭಿಸಬೇಕು. ಕಾರ್ಖಾನೆ ಆರಂಭಕ್ಕೂ ಮುನ್ನ ಜಿಲ್ಲೆಯಲ್ಲಿರುವ ಎಲ್ಲಾ ರೈತ ಸಂಘಟನೆಗಳ ಸಭೆ ಕರೆದು, ಚರ್ಚೆ ನಡೆಸುವ ಮೂಲಕ ದರ ನಿಗದಿ ಮಾಡಬೇಕು. ಪ್ರಸ್ತುತ ಸಕ್ಕರೆ ರೇಟು ಹೆಚ್ಚಿರುವ ಕಾರಣ ಪ್ರತಿ ಟನ್ ಕಬ್ಬಿಗೆ 5,500 ರು. ದರವನ್ನು ನಿಗದಿ ಮಾಡಬೇಕು. ಕಾರ್ಖಾನೆಯವರು ರಿಕವರಿಯಲ್ಲಿ ಕಡಿಮೆ ತೋರಿಸಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ತಡೆಗಟ್ಟುವ ಮೂಲಕ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಅಸುಂಡಿ ಮಾತನಾಡಿ, ಸಂಗೂರು ಸಕ್ಕರೆ ಕಾರ್ಖಾನೆಯಲ್ಲಾಗಲಿ, ಡಿಸಿ ಆಫೀಸ್ನಲ್ಲಾಗಲಿ ಎಲ್ಲಿಯಾದರೂ ಸರ್ಕಾರದಿಂದ ಒಂದು ರಿಕವರಿ ಲ್ಯಾಬ್ನ್ನು ಸ್ಥಾಪನೆ ಮಾಡಬೇಕು. ಬಹಳ ಪ್ರಮುಖವಾಗಿ ಸಂಗೂರು ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ರಟ್ಟಿಹಳ್ಳಿ ತಾಲೂಕು ಭೈರನಪಾದದಲ್ಲಿರುವ ಜಿಎಂ ಯೂನಿಟ್-2ಗೆ ಯಾವುದೇ ಕಾರಣಕ್ಕೂ ಸರಬರಾಜು ಮಾಡಬಾರದು. ಸಂಗೂರು ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ಇದೆ ಕಾರ್ಖಾನೆಗೆ ಸರಬರಾಜು ಮಾಡಬೇಕು. ಒಂದುವೇಳೆ ಕಬ್ಬಿಗೆ ದರ ನಿಗದಿ ಮಾಡದೆ ಕಾರ್ಖಾನೆ ಪ್ರಾರಂಭಿಸಿದರೆ ಜಿಲ್ಲಾದ್ಯಂತ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.ಈ ವೇಳೆ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಅಶೋಕರಡ್ಡಿ ಮರಚರಡ್ಡೇರ ಸೇರಿದಂತೆ ಕಬ್ಬು ಬೆಳೆಗಾರ ರೈತ ಮುಖಂಡರು ಉಪಸ್ಥಿತರಿದ್ದರು.