ಕನ್ನಡಪ್ರಭ ವಾರ್ತೆ ಮೈಸೂರು
ಕಬಿನಿ ನದಿಯ ಉಗಮ ಸ್ಥಳವಾದ ಕೇರಳ ವಯನಾಡುವಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿದೆ.
ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಸರಗೂರು ಸಮೀಪದ ಕಬಿನಿ ಜಲಾಶಯದಲ್ಲಿ ನೀರು ಅಪಾಯದ ಮಟ್ಟ ಮೀರುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯದಿಂದ ಮಂಗಳವಾರ 70 ಸಾವಿರ ಕ್ಯುಸೆಕ್ ಗೂ ಹೆಚ್ಚು ನೀರನ್ನು ನದಿಗೆ ಬಿಡಲಾಗಿದೆ.ಪರಿಣಾಮವಾಗಿ ನದಿ ಪಾತ್ರದಲ್ಲಿನ ಹುಲ್ಲಹಳ್ಳಿ, ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮತ್ತೊಂದೆಡೆ ಕಾವೇರಿ ನದಿಯಿಂದಲೂ ಹೆಚ್ಚು ನೀರನ್ನು ನದಿಗೆ ಬಿಟ್ಟಿರುವುದರಿಂದ ಕಾವೇರಿ ಮತ್ತು ಕಪಿಲಾ ನದಿಗಳ ಸಂಗಮ ಸ್ಥಳವಾದ ಟಿ. ನರಸೀಪುರದಲ್ಲಿಯೂ ನದಿ ಅಪಾಯದ ಮಟ್ಟ ಮೀರುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಬಂದ್:
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನ ಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ. ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ಇನ್ನೂ ಹೆಚ್ಚಿನ ಅಪಾಯ ಉಂಟಾಗುವ ಸಾಧ್ಯತೆ ಇದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ- ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿತು. ಎಚ್.ಡಿ. ಕೋಟೆಯ ಮೂರು ಹೋಬಳಿ ಮತ್ತು ಸರಗೂರಿನ ಎರಡು ಹೋಬಳಿ ವ್ಯಾಪ್ತಿಯ ಶಾಲಾ- ಕಾಲೇಜಿಗೆ ರಜೆ ಘೋಷಿಸಲಾಗಿತ್ತು.
ಮಳೆಯ ಆರ್ಭಟಕ್ಕೆ ಕಾವೇರಿ ಕೊಳ್ಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೆ.ಆರ್.ಎಸ್.ನಿಂದಲೂ ನೀರು ಬಿಡುಗಡೆ:
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ರೈತರು ಕೃಷಿ ಚಟುವಟಿಕೆಗೆ ಹೋಗದಂತೆ ಹಾಗೂ ಜಾನುವಾರು ಬಿಡದಿರಲು ಸೂಚಿಸಲಾಗಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.ತಾಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕ ಗಮನಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮನವಿ ಮಾಡಿದ್ದಾರೆ.