ಭಾಗಮಂಡಲದಲ್ಲಿ ಪ್ರವಾಹ, ರಸ್ತೆ ಮೇಲೆ ನೀರು

KannadaprabhaNewsNetwork |  
Published : Aug 02, 2026, 02:30 AM IST
ಚಿತ್ರ :  1ಎಂಡಿಕೆ3 : ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿರುವುದು.  | Kannada Prabha

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಶನಿವಾರವೂ ಭಾರಿ ಮಳೆಯಾಗಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದೇ ಮೊದಲ ಬಾರಿಗೆ ಚಿಕ್ಲಿಹೊಳೆ ಜಲಾಶಯ ಕೂಡ ಭರ್ತಿಯಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಶನಿವಾರವೂ ಭಾರಿ ಮಳೆಯಾಗಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದೇ ಮೊದಲ ಬಾರಿಗೆ ಚಿಕ್ಲಿಹೊಳೆ ಜಲಾಶಯ ಕೂಡ ಭರ್ತಿಯಾಗಿದೆ.

ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಹಾರಂಗಿ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದೆ. ಇದರಿಂದ ಹಾರಂಗಿ-ಯಡವನಾಡ-ಸೋಮವಾರಪೇಟೆ ಸಂಪರ್ಕ ಬಂದ್‌ ಆಗಿದೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಕಾವಲು ಕಾಯುತ್ತಿದ್ದು, ಸೇತುವೆಯಲ್ಲಿ ವಾಹನಗಳು ಸಂಚರಿಸದಂತೆ ಬ್ಲಾಕ್ ಮಾಡಲಾಗಿದೆ.

ಬ್ರಹ್ಮಗಿರಿ ತಪ್ಪಲು ಪ್ರದೇಶ, ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಸ್ನಾನಘಟ್ಟ ಪ್ರದೇಶ, ತ್ರಿವೇಣಿ ಸಂಗಮದ ಉದ್ಯಾನವನ ಮುಳುಗಡೆಯಾಗಿದೆ. ಸ್ನಾನಘಟ್ಟ ಸಮೀಪದ ಅಂಗಡಿಗಳು ಜಲಾವೃತಗೊಂಡಿವೆ. ಮೇಲ್ಸೇತುವೆ ಇರುವುದರಿಂದ ರಸ್ತೆ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಕೆಲ ಭಾಗದಲ್ಲಿ ಯಾರೂ ಸಂಚರಿಸಿದಂತೆ ಸೂಚನಾ ಫಲಕ ಹಾಕಲಾಗಿದೆ.

ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಗಾಳಿ ಮಳೆ ಜೋರಾಗಿದ್ದು ಭಾಗಮಂಡಲ ಸೇರಿದಂತೆ ಇತರ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿದುಕೊಂಡಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಬಲಮುರಿ, ಗುಹ್ಯ ಪ್ರದೇಶದಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಮಡಿಕೇರಿ ನಗರದ ಎಫ್‌ಎಂಸಿ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಲೇಔಟ್‌ನಲ್ಲಿ ನಿವೃತ್ತ ಎಎಸ್​ಐ ಬಿದ್ದಪ್ಪ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ. ಮನೆಯ ತಡೆಗೋಡೆ ಕುಸಿದಿದ್ದು, ಇಡೀ ಮನೆಗೆ ಅಪಾಯ ಎದುರಾಗಿದೆ. ಗೃಹಪ್ರವೇಶಕ್ಕೆ ಇನ್ನೆರಡು ತಿಂಗಳು ಬಾಕಿ ಇರುವಾಗಲೇ ದುರಂತರ ಸಂಭವಿಸಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯ ಕೆಳ ಭಾಗದ ಮಣ್ಣು ಕುಸಿಯಲಾರಂಭಿಸಿದೆ.

ಸ್ಥಳೀಯರು ಮಣ್ಣು ಕುಸಿಯುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಸುಮಾರು ಮೂರರಿಂದ ನಾಲ್ಕು ಅಡಿಯ ಬೃಹತ್ ತಡೆಗೋಡೆಯು ಕುಸಿದಿದೆ.

ಮಡಿಕೇರಿ ತಾಲೂಕಿನ ಮದೆ ಗ್ರಾಮದ ಕೊಪ್ಪಡ್ಕ ಎಂಬವರ ಮನೆ ಹಿಂಬದಿ ಬರೆ ಕುಸಿದಿದ್ದು, ಮನೆ ಭಾಗಶಃ ಹಾನಿಗೊಳಗಾಗಿದೆ. 2ನೇ ಮೊಣ್ಣಂಗೇರಿ ಗ್ರಾಮದ ಸಂಪರ್ಕ ರಸ್ತೆ ಬರೆ ಕುಸಿತದಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

ಶ್ರೀಮಂಗಲ ಹೋಬಳಿ ಟಿ ಶೆಟ್ಟಿಗೇರಿ ಗ್ರಾಮದ ಎಚ್.ಆರ್. ಮಂಜುಳ ಅವರ ಮನೆಯ ಗೋಡೆ ಮಳೆಯಿಂದಾಗಿ ಕುಸಿದು ಮನೆಗೆ ಹಾನಿಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 56.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 992.11 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 2141.72 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ 86.08 ಮಿ.ಮೀ,

ವಿರಾಜಪೇಟೆ ತಾಲೂಕಿನಲ್ಲಿ 35.55 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 29.43 ಮಿ.ಮೀ , ಸೋಮವಾರಪೇಟೆ ತಾಲೂಕಿನಲ್ಲಿ 23.90 ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ 39 ಮಿ.ಮೀ. ಮಳೆಯಾಗಿದೆ. ಹೋಬಳಿ ವಿವರ: ಮಡಿಕೇರಿ 86, ನಾಪೋಕ್ಲು 45.20, ಸಂಪಾಜೆ 87.50, ಭಾಗಮಂಡಲ 125.60, ವಿರಾಜಪೇಟೆ 33.60, ಅಮ್ಮತ್ತಿ 37.50, ಹುದಿಕೇರಿ 28.70, ಶ್ರೀಮಂಗಲ 68, ಪೊನ್ನಂಪೇಟೆ 15, ಬಾಳೆಲೆ 6.01, ಸೋಮವಾರಪೇಟೆ 103.40, ಶನಿವಾರಸಂತೆ 52, ಶಾಂತಳ್ಳಿ 180, ಕೊಡ್ಲಿಪೇಟೆ 40.20, ಕುಶಾಲನಗರ 31.80, ಸುಂಟಿಕೊಪ್ಪ 46.20 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.83 ಅಡಿಗಳು. ಕಳೆದ ವರ್ಷ ಇದೇ ದಿನ 2855.46 ಅಡಿಗಳು. ಹಾರಂಗಿಯಲ್ಲಿ ಸುರಿದ ಮಳೆ 39.60 ಮಿ.ಮೀ., ಕಳೆದ ವರ್ಷ ಇದೇ ದಿನ 3.20 ಮಿ.ಮೀ., ಇಂದಿನ ನೀರಿನ ಒಳಹರಿವು 9896 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4817 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 20000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3000 ಕ್ಯುಸೆಕ್. ನಾಲೆಗೆ 500 ಕ್ಯುಸೆಕ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗುರುಳಿದ ಆಲದ ಮರ: ವಾಹನ ಸವಾರರು ಪಾರು
ಜಿಲ್ಲೆಯಲ್ಲಿ ಅತ್ತಾವರ ಯಲ್ಲಪ್ಪ ಪ್ರತಿಮೆ ಸ್ಥಾಪನೆಗೆ ಪ್ರಯತ್ನ: ಅನಂತ್ ಮೈಸೂರು