ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ: ಶಾಸಕ ಶಿವರಾಮ ಹೆಬ್ಬಾರ

KannadaprabhaNewsNetwork |  
Published : May 25, 2025, 02:14 AM IST
ಫೋಟೋ ಮೇ.೨೪ ವೈ.ಎಲ್.ಪಿ. ೦೧ | Kannada Prabha

ಸಾರಾಂಶ

ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ. ಇವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯಗತ್ಯ.

ಯಲ್ಲಾಪುರ: ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ. ಇವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯಗತ್ಯ. ತಮ್ಮ ಬಾಲ್ಯದ ಜಾನಪದೀಯ ಸಂಭ್ರಮಾಚರಣೆಗಳನ್ನು ಮತ್ತು ಜಾನಪದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಜಾನಪದ ಉತ್ಸವದಲ್ಲಿ ಜ್ಯೋತಿ ಬೆಳಗಿಸಿ, ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ಇಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು. ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಉತ್ತರ ಕನ್ನಡ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಜಾನಪದ ಕಲೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸಿರುವುದು ವಿಶೇಷವಾಗಿದೆ. ಇಂದಿನ ಧಾವಂತದ ಜೀವನಶೈಲಿಯಲ್ಲಿ, ನಮ್ಮ ಮೂಲ ಸಂಸ್ಕೃತಿಯಿಂದ ನಾವು ದೂರವಾಗುತ್ತಿದ್ದೇವೆ. ಇಂತಹ ಜಾನಪದ ಉತ್ಸವಗಳು ನಮ್ಮ ಗ್ರಾಮೀಣ ಸೊಗಡು, ಆಚಾರ-ವಿಚಾರಗಳು ಮತ್ತು ಮೌಲ್ಯಗಳನ್ನು ಯುವ ಪೀಳಿಗೆಗೆ ತಲುಪಿಸಲು ಅತ್ಯಂತ ಸಹಕಾರಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ದನ್ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸುವುದು ನಮ್ಮ ಕರ್ತವ್ಯ. ಜಾನಪದ ಉತ್ಸವವು ವಿದ್ಯಾರ್ಥಿಗಳಿಗೆ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಪರಿಚಯಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಪಪಂ ಅಧ್ಯಕ್ಷೆ ನರ್ಮದಾ ನಾಯಕ್ ಮಾತನಾಡಿ, ಜಾನಪದ ಕಲೆಗಳು ಕೇವಲ ಮನರಂಜನೆಯ ಸಾಧನಗಳಲ್ಲ. ಬದಲಿಗೆ ಅವು ನಮ್ಮ ಇತಿಹಾಸ, ಸಂಪ್ರದಾಯಗಳು ಮತ್ತು ಜೀವನ ಶೈಲಿಯನ್ನು ಪ್ರತಿಬಿಂಬಿಸುವ ಜೀವಂತ ರೂಪಗಳು. ನಮ್ಮ ಪೂರ್ವಜರು ನಮಗೆ ಬಿಟ್ಟು ಹೋಗಿರುವ ಅಮೂಲ್ಯ ಸಂಪತ್ತು. ವಿದ್ಯಾರ್ಥಿಗಳು ಈ ಕಲೆಗಳನ್ನು ಕೇವಲ ನೋಡುವುದಲ್ಲದೆ, ಅವುಗಳನ್ನು ಕಲಿತು, ಅಭ್ಯಾಸ ಮಾಡಿ ಮುಂದಿನ ಪೀಳಿಗೆಗೆ ದಾಟಿಸಬೇಕು ಎಂದರು.

ಕಾಲೇಜು ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಸ್ಥಳೀಯ ಆಡಳಿತ ಸಂಸ್ಥೆಯಾಗಿ, ಪಟ್ಟಣ ಪಂಚಾಯಿತಿ ಯಾವಾಗಲೂ ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬೆಂಬಲ ನೀಡಲು ಬದ್ಧವಾಗಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಉತ್ಸವದಲ್ಲಿ ಕಾಲೇಜಿನ ವಿದ್ಯಾರ್ಥಿ ಕಲಾ ತಂಡಗಳು ಭಾಗವಹಿಸಿದ್ದವು. ಉತ್ತರ ಕನ್ನಡದ ವಿಶಿಷ್ಟ ಜಾನಪದ ನೃತ್ಯಗಳಾದ ಸುಗ್ಗಿ ಕುಣಿತ, ಕೋಲಾಟ, ಹಾಲಕ್ಕಿ ಕುಣಿತಗಳು ವಿಶೇಷ ಗಮನ ಸೆಳೆದವು. ಇದರೊಂದಿಗೆ ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ, ಗಾರುಡಿಗೊಂಬೆ, ಭಜನೆ, ಸೋಬಾನೆ ಪದಗಳು ಮತ್ತು ಲಾವಣಿಗಳಂತಹ ಪ್ರದರ್ಶನಗಳು ನೆರೆದಿದ್ದವರನ್ನು ರಂಜಿಸಿದವು. ಭರತನಾಟ್ಯ, ಗೌಳಿ ನೃತ್ಯ ಮುಂತಾದವುಗಳು ಕಲಾವಿದರ ಉತ್ಸಾಹಭರಿತ ಪ್ರದರ್ಶನಗಳು ಪ್ರೇಕ್ಷಕರನ್ನು ರಂಜಿಸಿದವು.

ಸಮಗ್ರವಾಗಿ ಜಾನಪದ ಸಂಸ್ಕೃತಿಯನ್ನು ಬಿಂಬಿಸಲು, ಕಾಲೇಜಿನ ಆವರಣದಲ್ಲಿ ಜಾನಪದ ಕರಕುಶಲ ವಸ್ತುಗಳ ಪ್ರದರ್ಶನ, ದೇಶಿ ಆಹಾರ ಮಳಿಗೆಗಳನ್ನು ತೆರೆಯಲಾಗಿತ್ತು. ಸ್ಥಳೀಯ ಕಲಾವಿದರು ತಯಾರಿಸಿದ ಮರದ ಕೆತ್ತನೆಗಳು, ಬಿದಿರಿನ ಉತ್ಪನ್ನಗಳು, ಮಣ್ಣಿನ ಮಡಿಕೆಗಳು ಮತ್ತು ಸಾಂಪ್ರದಾಯಿಕ ಉಡುಗೆಗಳು ಗಮನ ಸೆಳೆದವು. ಗ್ರಾಮೀಣ ಸೊಗಡಿನ ಸಿಹಿ ಮತ್ತು ಖಾರದ ತಿನಿಸುಗಳ ಮಳಿಗೆಗಳು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಿದವು.

ಸಹಾಯಕ ಪ್ರಾಧ್ಯಾಪಕ ಶರತಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕಿ ಶಾಂತೇರಿ ದಾಮೋದರ್ ಪೈ ಬಹುಮಾನ ವಿತರಿಸಿದರು. ವಿದ್ಯಾರ್ಥಿನಿಯರಾದ ವೇದ ಭಟ್ಟ ಪ್ರಾರ್ಥಿಸಿದರು. ಕಾವ್ಯಶ್ರೀ ಮರಾಠಿ ಮತ್ತು ನಂದಿತಾ ಭಾಗ್ವತ್ ನಿರ್ವಹಿಸಿದರು. ಮೇಘಾ ದೇವಳಿ ವಂದಿಸಿದರು.

ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಬೋಧಕ ಬೋಧಕೇತರ ಸಿಬ್ಬಂದಿಗಳು ಸಾರ್ವಜನಿಕರ ಸಹಕಾರದಿಂದ ಜಾನಪದ ಉತ್ಸವ ಯಶಸ್ವಿಯಾಗಿ ನೆರವೇರಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ