ಜಾನಪದ ನಮ್ಮ ಬದುಕಿನ ಅವಿಭಾಜ್ಯ ಅಂಗ: ಎಸ್.ಎಂ. ಉಪ್ಪಾರ

KannadaprabhaNewsNetwork |  
Published : Aug 23, 2026, 03:00 AM IST
ವಿಶ್ವ ಬುಡಕಟ್ಟು ದಿನಾಚರಣೆ | Kannada Prabha

ಸಾರಾಂಶ

ಇಂಡಿ ತಾಲೂಕಿನ ನಾದ ಕೆ.ಡಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ ಹಮ್ಮಿಕೊಂಡ ವಿಶ್ವ ಬುಡಕಟ್ಟು ದಿನಾಚರಣೆ ಹಾಗೂ ವಿಶ್ವ ಜಾನಪದ ದಿನಾಚರಣೆಯಲ್ಲಿ ಎಚ್.ಎ. ನಂದಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಉಪ್ಪಾರ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಇಂಡಿ

ಜಾನಪದ ಸರ್ವಕಾಲಿಕವಾಗಿದ್ದು, ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ಎಚ್.ಎ. ನಂದಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಉಪ್ಪಾರ ಹೇಳಿದರು.

ತಾಲೂಕಿನ ನಾದ ಕೆ.ಡಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ ಹಮ್ಮಿಕೊಂಡ ವಿಶ್ವ ಬುಡಕಟ್ಟು ದಿನಾಚರಣೆ ಹಾಗೂ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕದ ಉತ್ತರ ಭಾಗ ಸೇರಿದಂತೆ ಮೈಸೂರು ಪ್ರಾಂತ್ಯದಲ್ಲಿ ಸೋಲಿಗರು, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸುಡಗಾಡು ಸಿದ್ಧರು ಮತ್ತು ಗೊಂದಳಿ ಸೇರಿದಂತೆ ಹಲವು ಬುಡಕಟ್ಟು ಸಮುದಾಯಗಳು ತಮ್ಮದೇ ಆದ ವಿಶಿಷ್ಟ ಜಾನಪದ ಪರಂಪರೆ ಹೊಂದಿವೆ. ಜಾನಪದದಲ್ಲಿ ಶಿಷ್ಟ ಹಾಗೂ ಅಶಿಷ್ಟ ಸಾಹಿತ್ಯದ ಅಂಶಗಳಿದ್ದರೂ, ಅವುಗಳಲ್ಲಿ ಹಾಸ್ಯ, ವಿಡಂಬನೆ, ಚಿಂತನೆ ಹಾಗೂ ಜೀವನ ಮೌಲ್ಯಗಳು ಅಡಕವಾಗಿವೆ ಎಂದವರು ವಿವರಿಸಿದರು.

ಒಡಪು, ಒಡಗೆತೆ, ಕಥೆ, ತ್ರಿಪದಿಗಳು ಸೇರಿದಂತೆ ಹಲವು ಪ್ರಕಾರಗಳ ಮೂಲಕ ಜಾನಪದವು ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಶ್ರಮಜೀವಿಗಳ ಬದುಕಿನಲ್ಲಿ ಕಸ ತೆಗೆಯುವಾಗ, ಬೀಸುವಾಗ, ಕುಟ್ಟುವಾಗ, ಮದುವೆ ಮತ್ತಿತರ ಸಂದರ್ಭಗಳಲ್ಲಿ ಜಾನಪದ ಹಾಡುಗಳು ಮತ್ತು ಆಚರಣೆಗಳು ಬೆಸೆದುಕೊಂಡಿವೆ ಎಂದು ಹೇಳಿದರು.

ಪಾವನ ಸಾನ್ನಿಧ್ಯ ವಹಿಸಿದ್ದ ಶಿರಶಾಡ ಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ಶಿಸ್ತು ಮತ್ತು ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರ ನೀಡುವುದು ಅಗತ್ಯ. ಜಾನಪದ ಸಂಸ್ಕಾರವನ್ನು ಮಕ್ಕಳಿಗೆ ಪರಿಚಯಿಸಿದರೆ ಸಮಾಜದ ಸಂಸ್ಕೃತಿ ಉಳಿಯುತ್ತದೆ, ಇಲ್ಲವಾದರೆ ಅದು ಅಳಿದುಹೋಗುವ ಅಪಾಯವಿದೆ ಎಂದು ಹೇಳಿದರು.

ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಪಂಡಿತ ಅವಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಳಿವಿನಂಚಿನಲ್ಲಿರುವ ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಜಾನಪದ ಪರಿಷತ್‌ನ ಡಾ. ಜಾನಪದ ಎಸ್. ಬಾಲಾಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ವಿದೇಶಗಳಲ್ಲಿಯೂ ಜಾನಪದ ಸಮ್ಮೇಳನಗಳನ್ನು ಆಯೋಜಿಸಿ ಜಾನಪದ ಸಂರಕ್ಷಣೆಗೆ ಶ್ರಮಿಸುತ್ತಿರುವುದು ಹೆಮ್ಮೆಯ ಸಂಗತಿ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಜಾನಪದ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಯುವ ಪೀಳಿಗೆಗೆ ಜಾನಪದದ ಅರಿವು ಮೂಡಿಸಲು ಸಹಕಾರಿಯಾಗಿದೆ.ಜಾನಪದ ಉಳಿದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ; ಜಾನಪದ ಬೆಳೆದರೆ ನಮ್ಮ ಮುಂದಿನ ಪೀಳಿಗೆಯ ಬೇರುಗಳು ಗಟ್ಟಿಯಾಗುತ್ತವೆ ಎಂದು ಹೇಳಿದರು.

ಪ್ರೌಢ ಶಾಲೆ ಮುಖ್ಯಶಿಕ್ಷಕ ಸಿ.ಎಂ. ಬಂಡಗಾರ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಅಂಕದ, ಸರ್ದಾರ್ ಮುಲ್ಲಾ, ಸಿದ್ಧಾರೂಢ ಕೊಳ್ಳೂರ, ಅಣ್ಣಾರಾಯ ಗುಗದಡ್ಡಿ, ಸಂಗನಗೌಡ ಹಚ್ಚಡದ ಸೇರಿದಂತೆ ಹಲವರು ಇದ್ದರು. ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಬುಡಕಟ್ಟು ಕಲಾವಿದರಾದ ದೇವಿಂದ್ರ ಪ. ಗೊಂದಳಿ, ಬಾಬು ಗೊಂದಳಿ, ಸುಭಾಸ್ ಗೊಂದಳಿ ಮತ್ತಿತರರು ಗೊಂದಳಿ ಕಲಾ ಪ್ರದರ್ಶನ ನೀಡಿದರು. ಸುಭಾಸ್ ಕಾಮಾ ಅವರು ಎಕ್ತಾರಿ ಪದಗಳನ್ನು ಪ್ರಸ್ತುತಪಡಿಸಿ ಗಮನ ಸೆಳೆದರು. ಸಂಗನಗೌಡ ಹಚ್ಚಡದ ನಿರೂಪಿಸಿದರು. ಅಣ್ಣಾರಾಯ ಗುಗದಡ್ಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಬ್ಬದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ
ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಲು ರಾಜ್ಯಮಟ್ಟ ಕಾರ್ಯಕ್ರಮ