ಕನ್ನಡಪ್ರಭ ವಾರ್ತೆ ಮಡಿಕೇರಿ
ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ‘ಜಾನಪದ ವೈವಿಧ್ಯ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಾನಪದ ಕಲೆ, ಸಾಹಿತ್ಯ ದಿನದಿಂದ ದಿನಕ್ಕೆ ಮರೆಯಾಗುತ್ತಿದೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯ. ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತವಾಗಿದ್ದು, ಎಲ್ಲಾ ಮಾದರಿಯ ಜಾನಪದ ಕಲೆಗಳನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಜಾನಪದ ಪರಿಷತ್ ಪಟ್ಟಣಕ್ಕೆ ಮಾತ್ರ ಸೀಮಿತವಾಗದೆ ಗ್ರಾಮೀಣ ಭಾಗದಲ್ಲೂ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ. ಜಾನಪದ ಉತ್ಸವಗಳು ಹೆಚ್ಚು ಹೆಚ್ಚು ನಡೆಯಬೇಕು. ಜಾನಪದ ಪರಿಷತ್ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಜಾನಪದೀಯರಲ್ಲಿ ಯಾವುದೇ ಭೇದ ಭಾವವಿಲ್ಲ. ಸಹಜ ಪ್ರೀತಿಯಿಂದ ಬೆಳೆದು ಬಂದವರು. ಇಂದಿನ ದಿನಮಾನದಲ್ಲಿ ಎಲ್ಲವೂ ಭಿನ್ನವಾಗಿದೆ. ಒಗ್ಗಟ್ಟು ಮರೆಯಾಗಿದೆ. ಈ ನಿಟ್ಟಿನಲ್ಲಿ ಜಾನಪದೀಯ ಮನಸ್ಸುಗಳನ್ನು ಜೋಡಿಸುವ ಕೆಲಸವನ್ನು ಪರಿಷತ್ ಮಾಡುತ್ತಿದೆ ಎಂದರು.
ಉತ್ತಮ ಹಾಗೂ ನೆಮ್ಮದಿಯ ಸಮಾಜ ನಿರ್ಮಾಣಕ್ಕೆ ಜಾನಪದ ಸಹಕಾರಿ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಜಾನಪದವನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗ ತಾಂತ್ರಿಕ ಬದುಕಿನಲ್ಲಿ ಕಳೆದುಹೋಗಬಾರದು ಎಂದರು.ಪ್ರಾಸ್ತಾವಿಕವಾಗಿ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕೂಡಿ ಬಾಳುವ ಸಂತೋಷ ಉಳಿಸಿಕೊಂಡು ಬಂದವರೇ ಜಾನಪದರು. ಜಾನಪದರು ಎಂದಿಗೂ ಪ್ರಚಾರ ಮತ್ತು ಪ್ರಸಿದ್ಧಿಗೆ ಒಳಪಟ್ಟವರಲ್ಲ. ತಾಂತ್ರಿಕತೆ ಹೆಚ್ಚಾದಂತೆ ಜಾನಪದ ಮರೆಯಾಗುತ್ತಿದೆ. ವಿದ್ಯಾರ್ಥಿಗಳು ಜಾನಪದದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಜಾನಪದ ಪರಿಷತ್ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಖಜಾಂಚಿ ಸಂಪತ್ ಕುಮಾರ್, ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್, ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ವಿಜಯ್ ಇದ್ದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದಿಂದ ಸಾಂಸ್ಕೃತಿಕ ನೃತ್ಯ ನಡೆಯಿತು. ಮಡಿಕೇರಿಯ ಸಪ್ತಸ್ವರ ಕಲಾವಿದರ ಬಳಗದಿಂದ ಜಾನಪದ ಗೀತೆ ಗಾಯನ, ಶನಿವಾರಸಂತೆಯ ಜಾನಪದ ಕಲಾವಿದ ಮೊಗೇರ ಸುರೇಶ್ ಅವರಿಂದ ಜಾನಪದ ಗೀತ ಗಾಯನ, ಕಾಶಿ ಅಚ್ಚಯ್ಯ ಅವರಿಂದ ದುಡಿಪಾಟ್, ವೀರಾಜಪೇಟೆಯ ಕಲಾವಿದ ಸಾದಿಕ್ ಹಂಸ ತಂಡದ ಕುಂಚಗಾಯನ ಪ್ರದರ್ಶನ ನಡೆಯಿತು.
ಮೊಗೇರ ಸುರೇಶ್ ಹಾಗೂ ಸಾದಿಕ್ ಹಂಸ ಅವರನ್ನು ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಜಾನಪದ ಪರಿಕರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಡಾ.ಕಾವೇರಿ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಜ್ವಲ್ ರಂಜಿತ್ ಸ್ವಾಗತಿಸಿದರು. ಜಯಲಕ್ಷ್ಮಿ ನಿರೂಪಿಸಿದರು. ಸಂಪತ್ ಕುಮಾರ್ ವಂದಿಸಿದರು.