ಕನ್ನಡಪ್ರಭ ವಾರ್ತೆ ಅಥಣಿ
ಇಲ್ಲಿನ ಕೆಎಲ್ಈ ಸಂಸ್ಥೆಯ ಎಸ್ಎಸ್ಎಮ್ಎಸ್ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ -2026 ಅದ್ಧೂರಿ ಚಾಲನೆ ನೀಡಿ ಮಾತನಾಡಿದರು. ಇಂದಿನ ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ನಮ್ಮ ಮಣ್ಣಿನ ಅಮೂಲ್ಯವಾದ ಜನಪದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಜಾನಪದ ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ನಶಿಸುತ್ತಿರುವ ಜನಪದ ಸಂಸ್ಕೃತಿಗಳನ್ನು ಜೀವಂತವಾಗಿಸುವ ಸಂಕಲ್ಪದಿಂದ ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಜಾನಪದ ಜಾತ್ರೆಯು ನಮ್ಮ ಮಹಾವಿದ್ಯಾಲಯದ ಆವರಣದಲ್ಲಿ ಹಬ್ಬದ ಕಳೆಯನ್ನು ತಂದಿದೆ. ಕೆ.ಎಲ್.ಇ ಸಂಸ್ಥೆಯು ಕೇವಲ ಅಕ್ಷರ ಜ್ಞಾನವನ್ನಷ್ಟೇ ಅಲ್ಲದೆ, ಸಾಂಸ್ಕೃತಿಕ ಮೌಲ್ಯಗಳನ್ನೂ ವಿದ್ಯಾರ್ಥಿಗಳಲ್ಲಿ ಬಿತ್ತುತ್ತಿದೆ. ಜನಪದ ಜಾತ್ರೆಯ ಮೂಲಕ ವಿದ್ಯಾರ್ಥಿಗಳು ತಮ್ಮ ಬೇರುಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿರುವುದು ಮೆಚ್ಚುಗೆಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಭಾರತಿ ಗದ್ದಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಾನಪದ ಸಾಹಿತ್ಯ ಮತ್ತು ಮೌಖಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಇಂದಿನ ಯುವಜನತೆಯ ಪಾತ್ರ ದೊಡ್ಡದಿದೆ. ಶಾಲಾ ಕಾಲೇಜು ಹಂತಗಳಲ್ಲಿ ಇಂತಹ ಜಾತ್ರೆ ಮತ್ತು ಉತ್ಸವಗಳನ್ನ ನಡೆಸುವುದರಿಂದ ಮುಂದಿನ ಪೀಳಿಗೆಗೆ ಕಲೆಯನ್ನು ಪರಿಚಯಿಸಲು ಸಹಕಾರಿಯಾಗುತ್ತದೆ ಎಂದರು.ಜನಪದ ಜಾತ್ರೆಯು ಅಥಣಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸಾಂಪ್ರದಾಯಿಕ ಉಡುಪುಗಳು, ಹಳ್ಳಿ ಸೊಗಡಿನ ಊಟದ ವ್ಯವಸ್ಥೆ, ಜಾನಪದ ಕಲೆಗಳ ಅನಾವರಣ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು. ಒಟ್ಟಾರೆ ಜನಪದ ಕಲೆಗಳ ಪುನರುತ್ಥಾನಕ್ಕೆ ಉತ್ತಮ ನಾಂದಿ ಹಾಡಿತು. ಇಡೀ ದಿನ ಕಾಲೇಜು ಆವರಣವು ಗ್ರಾಮೀಣ ಸೊಗಡಿನ ವೈಭವ ಕಂಡು ಬಂತು.