ಸಂವಿಧಾನ ಧರ್ಮವನ್ನು ಪ್ರಾಮಾಣಿಕತೆಯಿಂದ ಪಾಲಿಸಿ

KannadaprabhaNewsNetwork | Published : Nov 27, 2024 1:00 AM

ಕನ್ನಡಪ್ರಭ ವಾರ್ತೆ ವಿಜಯಪುರ ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ದೇಶವಾಸಿಗಳು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ದೇಶವಾಸಿಗಳು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ.ಬಿ.ಆರ್‌.ಅಂಬೇಡ್ಕರ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದಿಂದ ಆಯೋಜಿಸಿದ್ದ ಭಾರತದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನದಲ್ಲಿರುವ ಪೀಠಿಕೆಯನ್ನು ನಾವು ಸರಿಯಾಗಿ ಗ್ರಹಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವದ ವಿಕಾಸಕ್ಕೆ ಮತ್ತು ದೈನಂದಿನ ಚಟುವಟಿಕೆಗಳಿಗೆ ಮಾರ್ಗಸೂಚಿಯಾಗುತ್ತದೆ. ಸಂವಿಧಾನದ ಆಶಯಗಳು ಹಾಗೂ ಆಶೋತ್ತರಗಳನ್ನು ನಾವು ಹೇಗೆ ಅನುಸರಿಸುತ್ತೇವೆ ಮತ್ತು ಅದನ್ನು ಹೇಗೆ ಪಾಲಿಸುತ್ತೇವೆ ಎಂಬುದು ನಮಗೆ ಮುಖ್ಯವಾಗಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ, ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಡಾ.ಬಿ.ಆರ್‌.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಪ್ರತಿಜ್ಞೆ ಸ್ವೀಕರಿಸಿದರು.ಈ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸಿದರು.

ಪ್ರಾಧ್ಯಾಪಕ ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿ ವಂದಿಸಿದರು.

ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್.ಸ್ನಾತಕ ಘಟಕದಿಂದ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷ್ಮೀದೇವಿ ವೈ, ಸಹ-ಪ್ರಾಧಾಪಕ ಡಾ.ರಮೇಶ, ಎಂ.ಸೋನಕಾಂಬಳೆ, ಉಪನ್ಯಾಸಕ ಡಾ.ಯಲ್ಲಪ್ಪ ಕೊಂಬಿನೂರ, ಡಾ.ಬಸಪ್ಪ ಮಾದರ, ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.-----------------