ಸಂಚಾರ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು

KannadaprabhaNewsNetwork |  
Published : Feb 14, 2024, 02:17 AM IST
ಕಾಲ್ನಡಿಗೆ ಜಾಥಾ | Kannada Prabha

ಸಾರಾಂಶ

ಧಾರವಾಡ ಕೆಸಿಡಿ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಯಿತು.

ಧಾರವಾಡ: ವಾಹನ ಸವಾರರು ಸಂಚಾರ ನಿಯಮ ಪಾಲಿಸುವ ಮೂಲಕ ತಮ್ಮ ಜೀವದೊಂದಿಗೆ ಇತರರ ಜೀವವನ್ನು ಕಾಪಾಡಬೇಕು. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ನಿಯಮ ಪಾಲಿಸುವುದರಿಂದ ಸುರಕ್ಷಿತ ಸಂಚಾರ ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಕೆಸಿಡಿ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಕೆಸಿಡಿ ಕಾಲೇಜು, ಎನ್‌ಎಸ್‌ಎಸ್ ಘಟಕ ಹಾಗೂ ಇತರ ವಿಭಾಗಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಇದ್ದು, ವಾಹನಗಳ ದಟ್ಟಣೆ ಅಧಿಕವಾಗಿದೆ. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ಸವಾರರು ಜಾಗರೂಕತೆಯಿಂದ ಸಂಚಾರಿ ನಿಯಮ ಪಾಲಿಸುವ ಅಗತ್ಯವಿದೆ. ಅನೇಕರು ವಿಶೇಷವಾಗಿ ಯುವಕರು ವಾಹನವನ್ನು ಸುರಕ್ಷತಾ ಕ್ರಮ ಅನುಸರಿಸದೆ ಚಲಾಯಿಸುತ್ತಾರೆ. ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಉಂಟಾಗುತ್ತವೆ ಎಂದು ಹೇಳಿದರು.

ಪ್ರತಿಯೊಬ್ಬ ನಾಗರಿಕರು ವಾಹನ ಚಲಾಯಿಸುವಾಗ ಹೆಲ್ಮೇಟ್ ಮತ್ತು ಸಿಟ್‌ ಬೆಲ್ಟ್ ಧರಿಸಬೇಕು. ಈ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಎಂ. ಬ್ಯಾಕೋಡ ಮಾತನಾಡಿ, 25ರಿಂದ 40ರ ವಯೋಮಾನದ ಜನರು ಜಿಲ್ಲೆಯಲ್ಲಿ ಪ್ರತಿ ವರ್ಷ ಸರಿಸುಮಾರು 450 ಜನ ರಸ್ತೆ ಅಪಘಾತದಲ್ಲಿ ಮರಣ ಹೊಂದುತ್ತಿದ್ದಾರೆ. ಅವರನ್ನೇ ಅವಲಂಭಿಸಿದ ಹೆಂಡತಿ ಮಕ್ಕಳು ಮತ್ತು ತಂದೆ ತಾಯಿಗಳಿಗೆ ಸಾಕಷ್ಟು ತೊಂದರೆ ಉಂಟಾಗುತ್ತದೆ ಎಂದು ತಿಳಿಸಿದರು.

ವಾಹನಗಳ ಬ್ರೇಕ್ ಫೇಲ್, ನಿಯಂತ್ರಣ ತಪ್ಪಿ ಆಗುವ ಅಪಘಾತಕ್ಕಿಂತ ಹೆಚ್ಚಾಗಿ ಅತ್ತೀ ವೇಗವಾಗಿ ಚಲಾಯಿಸುವುದು, ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೆ ವಾಹನವನ್ನು ಚಲಾಯಿಸುವುದರಿಂದ ವ್ಯಕ್ತಿಯ ಸಾವಿಗೆ ಕಾರಣ ವಾಗಬಹುದು. ರಸ್ತೆ ನಿಯಮಗಳನ್ನು ಪಾಲನೆ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದು. ಸಾರ್ವಜನಿಕರು ಹಾಗೂ ಪ್ರತಿಯೋಬ್ಬ ನಾಗರಿಕರು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಹೇಳಿದರು.

ಕವಿವಿ ಕುಲಸಚಿವ ಡಾ. ಎ. ಚನ್ನಪ್ಪ, ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಎಂ.ಪಿ., ಕೆಸಿಡಿ ಪ್ರಾಚಾರ್ಯ ಡಾ. ಡಿ.ಬಿ. ಕರಡೋಣಿ, ಕವಿವಿ ಎನ್ ಎಸ್‌ಎಸ್ ಸಂಯೋಜಕ ಡಾ. ಎಂ.ಬಿ. ದಳಪತಿ ಸೇರಿದಂತೆ ಇತರರು ಇದ್ದರು.

ಧಾರವಾಡ ಪೂರ್ವ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಸ್ವಾಗತಿಸಿದರು. ಧಾರವಾಡ ಪಶ್ಚಿಮ ವಿಭಾಗದ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಭೀಮನಗೌಡ ಪಾಟೀಲ ವಂದಿಸಿದರು. ಜಿ.ವಿ.ದಿನಮನಿ ಕಾರ್ಯಕ್ರಮ ನಿರೂಪಿಸಿದರು.

ಕಾಲನಡಿಗೆ ಜಾಥಾದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಕೆಸಿಡಿ ಎನ್‌ಎಸ್‌ಎಸ್ ಸ್ವಯಂ ಸೇವಕರು, ರಾಯಾಪುರದ ಕೆಎಸ್‌ಆರ್‌ಪಿ ಬಟಾಲಿಯನ್, ಹುಬ್ಬಳ್ಳಿ-ಧಾರವಾಡ ಮೋಟಾರ ಡ್ರೈವಿಂಗ್ ಸ್ಕೂಲ್ ಅಸೋಸಿಯಷನ್, ಕವಿವಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾಲ್ನಡಿಗೆ ಜಾಥಾ ಕೆಸಿಡಿಯಿಂದ ಆರಂಭಗೊಂಡು ಎಲ್‌ಐಸಿ ಮೂಲಕ ಆಲೂರು ವೆಂಕಟರಾವ್ ವೃತ್ತ, ಕೋರ್ಟ್ ಸರ್ಕಲ್ ಮೂಲಕ ಆಲೂರು ವೆಂಕಟರಾವ್ ಭವನದಲ್ಲಿ ಮುಕ್ತಾಯಗೊಂಡಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌
ಸಂಪುಟ ಪುನಾರಚನೆ ಸರ್ಕಸ್; ಶಾಸಕರು- ಸುರ್ಜೇವಾಲ ಭೇಟಿ