ಕೊಪ್ಪಳ:
ಪೋಸ್ಟರ್ ಬಿಡುಗಡೆ ಮಾಡಿದ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಲು ಏ. 21ರಿಂದ ಜೂನ್ 4ರ ವರೆಗೆ ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡಲು ಸಾರ್ವಜನಿಕರು ಸಹಕರಿಸಬೇಕು. ಅದೇ ರೀತಿ ಜಿಲ್ಲೆಯಲ್ಲಿ ಈ ಅಭಿಯಾನವನ್ನು ಸಮರ್ಪಕವಾಗಿ ಹಮ್ಮಿಕೊಂಡು, ಎತ್ತು, ಹೋರಿ, ಹಸು, ಎಮ್ಮೆ ಮತ್ತು ಸಂಬಂಧಿಸಿದ ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತದೆ. ಈ ಅಭಿಯಾನದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರುಶುರಾಮ್ ಶೆಟ್ಟಪ್ಪನವರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಪಿ.ಎಂ. ಮಲ್ಲಯ್ಯ, ಯಲಬುರ್ಗಾ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಪ್ರಕಾಶ, ಕೊಪ್ಪಳ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ವಿನೋದ ಕುಮಾರ, ಕುಕನೂರ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಪಶು ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.