ಸಾಗರ: ಪಟ್ಟಣದ ನಾಲ್ಕೂ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡುವ ಮೂಲಕ ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಪೂರಕವಾದ ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭೀಮನಕೋಣೆ ರಸ್ತೆ ಅಭಿವೃದ್ಧಿಗೆ ೬ ಕೋಟಿ ರು. ಕೆಳದಿ ರಾಣಿ ಚೆನಮ್ಮ ವೃತ್ತದಿಂದ ಶ್ರೀಗಂಧ ಸಂಕೀರ್ಣವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ೫.೫ ಕೋಟಿ ರು. ಬಿಡುಗಡೆಯಾಗಿದೆ. ಇದರ ಜೊತೆಗೆ ಬಿ.ಎಚ್.ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾರ್ಕೆಟ್ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.ರಾಜ್ಯ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಕೆಲವರು ಅಭಿವೃದ್ಧಿಯಾಗುತ್ತಿಲ್ಲ ಎಂದು ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾನು ಶಾಸಕನಾದ ಮೇಲೆ ಅಭಿವೃದ್ಧಿ ಕಾರ್ಯಗಳು ಹಿಂದಿಗಿಂತ ವೇಗವಾಗಿ ನಡೆಯುತ್ತಿದೆ ಎಂದರು.
ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ. ಈಗಾಗಲೆ ಬಿ.ಎಚ್.ರಸ್ತೆ ನಿವಾಸಿಗಳಿಗೆ ಅಗಲೀಕರಣಕ್ಕೆ ಭೂಸ್ವಾಧೀನಪಡಿಸಿಕೊಳ್ಳುವ ನಿಟ್ಟಿನಲ್ಲಿ ೩೦ ದಿನ ಗಡುವು ನೀಡಿ ನೋಟಿಸ್ ನೀಡಲಾಗಿದೆ. ಸದ್ಯದಲ್ಲಿಯೆ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಲಾಗುತ್ತದೆ ಎಂದು ತಿಳಿಸಿದರು.ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ವಿ.ಮಹೇಶ್, ಅರವಿಂದ ರಾಯ್ಕರ್, ಮಧುಮಾಲತಿ, ರವಿಕುಮಾರ್, ಸತೀಶ್, ಸೈಯದ್ ಜಾಕೀರ್, ಕಾಂಗ್ರೆಸ್ ಪ್ರಮುಖರಾದ ಕಲಸೆ ಚಂದ್ರಪ್ಪ, ಉಷಾ, ಪ್ರಭಾವತಿ, ತಾಹೀರ್ ಇನ್ನಿತರರು ಹಾಜರಿದ್ದರು.