ಮತದಾರರ ಪಟ್ಟಿ ಲೋಪದೋಷ ತಿದ್ದುಪಡಿಗೆ 68,752 ನೋಟೀಸ್‍

KannadaprabhaNewsNetwork |  
Published : Sep 12, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧದ ರಾಜಕೀಯ ಪಕ್ಷಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರಮ್ಯ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮ್ಯಾಪಿಂಗ್ ಆಗದೇ ಇರುವ ಹಾಗೂ ಮತದಾರರ ವಿವರಗಳು ತಪ್ಪಾಗಿರುವ ಮತದಾರರ ಪಟ್ಟಿಯ ಲೋಪದೋಷ ತಿದ್ದುಪಡಿಗೆ ಸಂಬಂಧಿಸಿದಂತೆ ಒಟ್ಟು 68,752 ನೋಟಿಸ್‍ಗಳನ್ನು ಸೃಜಿಸಲಾಗಿದ್ದು, ಈ ಪೈಕಿ 51,219 ನೋಟಿಸ್‍ಗಳನ್ನು ತಲುಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ರಾಜಕೀಯ ಪಕ್ಷಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಬೂತ್ ಮಟ್ಟದ ಏಜೆಂಟರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಆಯೋಗದ ವೇಳಾಪಟ್ಟಿಯಂತೆ ಸೆ.6 ರಿಂದ ವಿಚಾರಣೆಗಳು ಆರಂಭಗೊಂಡಿದ್ದು, ಅ.12ರವರೆಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಈ ಹಂತದಲ್ಲಿ ಕಾರ್ಯನಿರ್ವಹಿಸಲು ಜಿಲ್ಲೆಯಾದ್ಯಂತ 102 ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಮತದಾರರ ನೋಂದಣಿ ಹಾಗೂ ಪರಿಶೀಲನಾ ನಮೂನೆಗಳಲ್ಲಿ ನಮೂದಿಸಿರುವ ಹೆಸರು, ತಂದೆಯ ಹೆಸರು ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಇತರೆ ದಾಖಲೆಗಳಲ್ಲಿನ ವಿವರಗಳ ನಡುವೆ ವ್ಯತ್ಯಾಸಗಳು ಕಂಡುಬರುತ್ತಿವೆ. ನಿಯಮಾವಳಿ ಪ್ರಕಾರ ಕನಿಷ್ಠ ಶೇ.60ರಷ್ಟು ಹೆಸರು ಹೊಂದಾಣಿಕೆಯಾಗದಿದ್ದಲ್ಲಿ ತಾಂತ್ರಿಕವಾಗಿ ತಡೆ ಹಿಡಿಯಲಾಗುತ್ತದೆ. ಇಂತಹ ವ್ಯತ್ಯಾಸಗಳಿರುವ ಪ್ರಕರಣಗಳನ್ನು ಗುರುತಿಸಿ ಈಗಾಗಲೇ ತಾಲ್ಲೂಕು ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಪಟ್ಟಿ ಕಳುಹಿಸಲಾಗಿದೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲೇ ಇಂತಹ ಸುಮಾರು 30 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಇವುಗಳ ತಿದ್ದುಪಡಿಗೆ ಕ್ರಮ ವಹಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ನಮೂನೆ-6 ರಡಿ 18,000 ಯುವ ಮತದಾರರನ್ನು ನೋಂದಾಯಿಸುವ ಗುರಿ ಹೊಂದಿದ್ದು, ಇದುವರೆಗೆ 9,887 ಅರ್ಜಿಗಳು ಸ್ವೀಕೃತವಾಗಿವೆ. ಇನ್ನು ಉಳಿದಿರುವ 5,000ಕ್ಕೂ ಹೆಚ್ಚು ಯುವ ಮತದಾರರನ್ನು ಸೇರ್ಪಡೆಗೊಳಿಸಲು ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಎಎಪಿ ಜಿಲ್ಲಾ ಕಾರ್ಯದರ್ಶಿ ಎಂ.ರಾಮಪ್ಪ, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯವವಂತ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ ಕುಮಾರ್, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಎಸ್‍ಪಿ ಜಿಲ್ಲಾಧ್ಯಕ್ಷ ಪ್ರಕಾಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌: ಜಿಲ್ಲೆಯ 1,05,493 ಮತದಾರರಿಗೆ ನೋಟೀಸ್‌
ಬಸವಯುಗ ಮಾನವರಿಗೆ ಘನತೆ ತಂದುಕೊಟ್ಟ ಯುಗ