ಕನ್ನಡಪ್ರಭ ವಾರ್ತೆ ತುಮಕೂರು
ಸ್ಥಳೀಯ ಸಾರ್ವಜನಿಕರು ಸಂಘ-ಸಂಸ್ಥೆಗಳ ಅಭಿಪ್ರಾಯದಂತೆ ಸರ್ಕಾರದ ವತಿಯಿಂದ ಶ್ರೀ ಸಿದ್ಧಿ ವಿನಾಯಕ ಮಾರುಕಟ್ಟೆ ಪ್ರದೇಶದಲ್ಲಿ ಕೈಗೊಳ್ಳುತ್ತಿರುವ ಮಲ್ಟಿ ಯುಟಿಲಿಟಿ ಮಾಲ್ ವಿತ್ಕಾರ್ ಪಾರ್ಕಿಂಗ್ ಯೋಜನೆಯನ್ನು ಕೈಬಿಡುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಒತ್ತಾಯಿಸಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಈ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿತ್ ಮಲ್ಟಿ ಲೆವೆಲ್ಕಾರ್ ಪಾರ್ಕಿಂಗ್ ಯೋಜನೆಗೆ ನಗರದ ನಾಗರೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಈ ಪ್ರದೇಶದಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನವನ್ನು ನೆಲ-ಸಮ ಮಾಡಲಾಯಿತು. ಅಂದಿನಿಂದ ಇಂದಿನವರೆಗೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತುಮಕೂರು ನಗರದ ನಾಗರೀಕರು, ಸಂಘ-ಸಂಸ್ಥೆಗಳು, ವಿರೋಧ ವ್ಯಕ್ತಪಡಿಸಿದ ಕಾರಣ ಈ ಯೋಜನೆ ಸ್ಥಗಿತಗೊಳಿಸಲಾಗಿತ್ತು, ಆದರೆ ಏಕಾಏಕಿ ಮತ್ತೊಮ್ಮೆ ಯೋಜನೆಯನ್ನು ಕಾರ್ಯಗತಗೊಳಿಸಲು ಸರ್ಕಾರ ಮುಂದಾಗಿದ್ದು, ಖಾಸಗಿ ಒಡತನಕ್ಕೆ ಸರ್ಕಾರದ ಜಾಗವನ್ನು ನೀಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿದರು. ತುಮಕೂರು ಮಹಾನಗರಪಾಲಿಕೆ ಅಧಿಕಾರಿಗಳು ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲು ಗಡಿಬಿಡಿಯಲ್ಲಿ ಸರಿಸುಮಾರು 40 ವರ್ಷಗಳಿಂದ ಸ್ವತ್ತಿನ ಅನುಭವದಲ್ಲಿರುವ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿ ಸ್ವತ್ತನ್ನು ಗುತ್ತಿಗೆದಾರರಿಗೆ ಗುತ್ತಿಗೆ ಮತ್ತು ಒಪ್ಪಂದದ ಕರಾರನ್ನು ನೋಂದಣಿ ಮಾಡಿದ್ದಾರೆ ಎಂದು ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿ ಸದಸ್ಯರು ಶಾಸಕರ ಗಮನಕ್ಕೆ ತಂದಿದ್ದು, ಈ ಗುತ್ತಿಗೆ ಒಪ್ಪಂದದ ಕರಾರು ಪತ್ರವನ್ನು ರದ್ದುಪಡಿಸಬೇಕೆಂದು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ನಗರಪಾಲಿಕೆ ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗೇಶ್, ನಗರ ಬಿಜೆಪಿ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸಿ.ಎನ್.ರಮೇಶ್, ಮಂಜುನಾಥ್, ಇಂದ್ರಕುಮಾರ್, ಮಲ್ಲಿಕಾರ್ಜುನ್, ವಿಷ್ಣವರ್ಧನ್, ಮಹೇಶ್ ಬಾಬು, ಶಿವಕುಮಾರ್, ಜಿಲ್ಲಾ ಓಬಿಸಿ ಅಧ್ಯಕ್ಷ ಕೆ.ಸತ್ಯಮೂರ್ತಿ, ವಿ.ಹೆಚ್.ಪಿ ಮುಖಂಡ ಜಿ.ಕೆ.ಶ್ರೀನಿವಾಸ್, ಬಿಜೆಪಿ ಮುಖಂಡರಾದ ಭೈರಣ್ಣ, ರುದ್ರೇಶ್, ಸತ್ಯಮಂಗಲ ಜಗದೀಶ್, ವಿರೂಪಾಕ್ಷಯ್ಯ, ಮಂಜು ಭಾರ್ಗವ್ ಮೊದಲಾದವರು ಇದ್ದರು.