ಗಂಗಾವತಿ: ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರು ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸರ್ಕಾರ ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜತೆಗೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ವಿವರಿಸಿದರು.
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ರಾಜ್ಯ 6ನೇ ವೇತನ ಆಯೋಗದ ವರದಿ ಅನುಷ್ಠಾನಗೊಂಡು 2022 ಜೂನ್ 31ಕ್ಕೆ 5 ವರ್ಷ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ 1ರಿಂದ ಪರಿಷ್ಕರಣೆ ಮಾಡಬೇಕಿತ್ತು. ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಎರಡು ಬಾರಿ ಈ ಅವಧಿ ವಿಸ್ತರಿಸಲಾಗಿದೆ. ಇಂತಹ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಕೂಡಲೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಉಮೇಶ ಎಂ., ಮೈಬುಬಲಿ, ಸೋಮಶೇಖರಗೌಡ್ರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಹನುಮಂತಪ್ಪ, ಬಿ.ಆರ್. ಜೋಶಿ, ಕಂದಾಯ ಇಲಾಖೆ ಕಾರ್ಯದರ್ಶಿ ಮೈಬುಬಲಿ, ಮಹೇಶ್, ಪ್ರೌಢಶಾಲಾ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮಂಜುನಾಥ್ ದರೋಜಿ, ಬಸವರಾಜ್ ಸ್ವಾಮಿ ಪ್ರಾಥಮಿಕ ಪದವೀಧರ ಶಿಕ್ಷಕರ ಸಂಘದ ಅಯ್ಯಪ್ಪ ಹೆಬ್ಬುಲಿ, ಆರೋಗ್ಯ ಇಲಾಖೆಯ ಅಧ್ಯಕ್ಷ ಶಿವಶಂಕರ ಕಲ್ಮಾನ್, ಕಾರ್ಯದರ್ಶಿ ವೆಂಕಟೇಶ್ ಶೆಟ್ಟಿ, ನೌಕರರ ಸಂಘದ ರಾಮಣ್ಣ, ಮಂಜುನಾಥ, ಶಿವಾನಂದ ತಿಮ್ಮಪುರ, ಶರಣಪ್ಪ ಹಕ್ಕಂಡಿ, ಛತ್ರಪ್ಪ ತಂಬೂರಿ ಭಾಗವಹಿಸಿದ್ದರು.