ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಅರಣ್ಯ ಹುತಾತ್ಮರ ಸ್ಮಾರಕದ ಬಳಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಹುತಾತ್ಮರಿಗೆ ಗೌರವ ಸೂಚಿಸಿ ನಂತರ ಮಾತನಾಡಿದರು.
ನೈಸರ್ಗಿಕ ಸಂಪತ್ತಿನ ರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಸೇವೆ ಮತ್ತು ತ್ಯಾಗವನ್ನು ಗೌರವಿಸುವುದರ ಜತೆಗೆ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಸಂದರ್ಭದಲ್ಲಿ ಕಾಡುಗಳ್ಳರು, ಅಕ್ರಮ ಬೇಟೆಗಾರರು ಹಾಗೂ ವಿವಿಧ ಅನಾಹುತಗಳ ನಡುವೆ ಅರಣ್ಯ ಸಿಬ್ಬಂದಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ವೀರ ಸಿಬ್ಬಂದಿಯ ತ್ಯಾಗ ಮತ್ತು ಬದ್ಧತೆಯನ್ನು ಸಮಾಜ ಸದಾ ಸ್ಮರಿಸಬೇಕು ಎಂದರು.
ಜಿಲ್ಲೆಯ ಹೆಮ್ಮೆಯಾಗಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನವು ಅಪಾರ ಜೀವವೈವಿಧ್ಯವನ್ನು ಹೊಂದಿದೆ. ಹುಲಿ, ಆನೆ ಸೇರಿದಂತೆ ಹಲವು ವನ್ಯಜೀವಿಗಳಿಗೆ ಆಶ್ರಯವಾಗಿರುವ ಬಂಡೀಪುರದ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಬುಡಕಟ್ಟು ಸಮುದಾಯಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಪ್ರಕೃತಿ ಸಂರಕ್ಷಣೆಗಾಗಿ ಎಲ್ಲರೂ ಕಾಡಿಗೆ ತೆರಳಿ ಕೆಲಸ ಮಾಡಬೇಕಿಲ್ಲ. ತಾವು ಇರುವ ಸ್ಥಳದಲ್ಲಿಯೇ ಪರಿಸರಕ್ಕೆ ಪೂರಕವಾದ ಸಣ್ಣ-ಪುಟ್ಟ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬಹುದು. ಇಂತಹ ಸಣ್ಣ ಪ್ರಯತ್ನಗಳೇ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪರಿಸರ ಸಂರಕ್ಷಣಾ ಕಾರ್ಯಗಳಿಗೆ ಪ್ರೇರಣೆಯಾಗುತ್ತವೆ ಎಂದು ಹೇಳಿದರು.
ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದರು. ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.
ಜಿಪಂ. ಉಪ ಕಾರ್ಯದರ್ಶಿ ಶೃತಿ , ಅರಣ್ಯ ಸಂರಕ್ಷಣಾಧಿಕಾರಿ ಸಭ್ಯಶ್ರಿ, ಪವನ್ ಕುಮಾರ್ ಇತರರು ಹಾಜರಿದ್ದರು,