ಕುಷ್ಟಗಿ: ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವ ಸಂಘ ರಚಿಸಿ, ಪ್ರತಿ ಸಂಘದಲ್ಲಿ 100 ರಿಂದ 250 ಯುವಕರನ್ನು ಸೇರ್ಪಡೆಗೊಳಿಸುವಂತೆ ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಪಿಡಿಒಗಳಿಗೆ ಸೂಚಿಸಿದರು.
ಎಲ್ಲ ಸಮುದಾಯಗಳ 16ರಿಂದ 35ವರ್ಷದೊಳಗಿನ ಯುವಕರನ್ನು ಸಂಘಟನೆಗೆ ಸೇರ್ಪಡೆಗೊಳಿಸಬೇಕು.ಯುವಕರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದರು.
ತಾಲೂಕಿನಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು.ಪಿಡಿಒಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರಿಗೆ ಸಮರ್ಪಕ ನೀರು ಪೂರೈಸಬೇಕು ಎಂದು ಸೂಚಿಸಿದರು.ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳಲ್ಲಿ ಮೊದಲು ಬೋರ್ವೆಲ್ ಪ್ರೆಸ್ಸಿಂಗ್ ಮಾಡಿಸಬೇಕು. ಅಗತ್ಯವಿದ್ದರೆ ಬಾಡಿಗೆ ಬೋರ್ವೆಲ್ ಪಡೆದು ನೀರು ಪೂರೈಸಬೇಕು. ಇದರಿಂದಲೂ ಸಮಸ್ಯೆ ಪರಿಹಾರವಾಗದಿದ್ದರೆ ಹೊಸ ಬೋರ್ವೆಲ್ ಕೊರೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಜನರಿಗೆ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಮಾತನಾಡಿ, ಅಧಿಕಾರಿಗಳು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿ ಸಮನ್ವಯ ಸಾಧಿಸುವ ಮೂಲಕ ಕುಡಿವ ನೀರು ಸೇರಿದಂತೆ ಮೂಲಸೌಲಭ್ಯ ಜನರಿಗೆ ತಲುಪಿಸಬೇಕು. ನೀರು ಹರಿದು ವ್ಯರ್ಥವಾಗದಂತೆ ಹಾಗೂ ಸೋರಿಕೆ ಕಂಡುಬಂದ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.
ತಾಪಂ ಇಒ ಅಮರೇಶ ಮಾತನಾಡಿ, ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ನರೇಗಾ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅರಣ್ಯ ಇಲಾಖೆಗೆ ಎಚ್ಚರಿಕೆ: ಅಕ್ರಮವಾಗಿ ಗಿಡ ಕಡಿದು ಸಾಮಿಲ್ ಹಾಗೂ ಅಡ್ಡೆಗಳಿಗೆ ಸಾಗಿಸುವ ಪ್ರಕರಣಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೆಸ್ಕಾಂ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿದ್ಯುತ್ ತಂತಿ ಹಾಗೂ ಕಂಬಗಳ ಕೆಳಗೆ ಗಿಡ ನೆಡದಂತೆ ಕ್ರಮವಹಿಸಬೇಕು ಎಂದು ತಾಪಂ ಇಒ ಅಮರೇಶ ಸೂಚಿಸಿದರು.