ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಸೂಚನೆ ಹಾಗೂ ಸಹಮತಿಯೊಂದಿಗೆ ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.
ಜಿಲ್ಲೆಯ 262 ಗ್ರಾಪಂ, 5 ಪಟ್ಟಣ ಪಂಚಾಯಿತಿ, 3 ಪುರಸಭೆ, 2 ನಗರಸಭೆ ಹಾಗೂ 1 ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 273 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 501 ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುತ್ತಿದೆ. 3,006ಕ್ಕೂ ಹೆಚ್ಚು ಸದಸ್ಯರನ್ನು ನೇಮಕ ಮಾಡಲಾಗುತ್ತದೆ.
ಪ್ರತಿ ಸಮಿತಿಯು 6 ಸದಸ್ಯರನ್ನು ಒಳಗೊಂಡಿರಲಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (1), ಹಿಂದುಳಿದ ವರ್ಗ (1), ಅಲ್ಪಸಂಖ್ಯಾತರು (1 - ಲಭ್ಯವಿದ್ದಲ್ಲಿ) ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ (2) ಮೀಸಲಾತಿ ನೀಡಲಾಗುತ್ತದೆ.
ಸಮಿತಿಗಳ ಪ್ರಮುಖ ಕಾರ್ಯಸೂಚಿ ಹಾಗೂ ಜವಾಬ್ದಾರಿಗಳು: ಫಲಾನುಭವಿಗಳ ಮನೆ-ಮನೆಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸೌಲಭ್ಯ ಸಮರ್ಪಕವಾಗಿ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಫಲಾನುಭವಿಗಳ ಅನಿಸಿಕೆ ಮತ್ತು ಅನುಭವದ ವಿಡಿಯೋಗಳನ್ನು ಸಂಗ್ರಹಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು. ಸ್ಥಳೀಯ ಮಟ್ಟದಲ್ಲಿ ಜನಸಂಪರ್ಕ ಕಚೇರಿ ತೆರೆದು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವುದು. ಯಾವುದೇ ಅರ್ಹ ವ್ಯಕ್ತಿ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಸೂಚಿಸುವುದು.
ಪ್ರತಿ ತಿಂಗಳು ಎರಡು ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವುದು ಹಾಗೂ ಮರಣ ಹೊಂದಿದ ಫಲಾನುಭವಿಗಳ ವಿವರ ಪಡೆದು ಸೌಲಭ್ಯ ನಿಲುಗಡೆಗೆ ಕ್ರಮ ಕೈಗೊಳ್ಳುವುದಾಗಿದೆ ಎಂದ ಅವರು, ಇನ್ನು 15 ದಿನಗಳ ಒಳಗೆ ತಾಲೂಕು ಸಮಿತಿ ಅಧ್ಯಕ್ಷರು ಸಮಿತಿಗಳನ್ನು ರಚಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸದಸ್ಯರು ಮಾತನಾಡಿ, ಹೊಸನಗರದಲ್ಲಿ ಹೊಸದಾಗಿ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣಕ್ಕೆ 4 ಎಕರೆ ಜಾಗ ಗುರುತಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದರು. ನಗರದಲ್ಲಿ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆಯನ್ನು ಸಮರ್ಪಕಗೊಳಿಸುವಂತೆ ಹಾಗೂ ಚಿತ್ರದುರ್ಗ-ಸಿಗಂಧೂರು ಮಾರ್ಗದ ಬಸ್ನ್ನು ಮರು ಚಾಲನೆಗೊಳಿಸಬೇಕೆಂದು ಕೋರಿದರು.
ಕೆಎಸ್ಆರ್ಟಿಸಿ ಡಿಟಿಓ ಮಾತನಾಡಿ, ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 76801377 ಮಹಿಳೆಯರು ಅಂದರೆ ಶೇ.65.30 ಮಹಿಳೆಯರು ಸೌಲಭ್ಯ ಪಡೆದಿದ್ದು, ಒಟ್ಟು 5856.10 ಕೋಟಿ ರು. ಸರ್ಕಾರ ಈ ಯೋಜನೆಗೆ ವೆಚ್ಚ ಮಾಡಿದೆ. ಜಿಲ್ಲೆಯ ವಿವಿಧ ಮಾರ್ಗಗಳಲ್ಲಿ ಚಲಿಸಲು 50 ಬಸ್ ಮತ್ತು 150 ಚಾಲಕ/ನಿರ್ವಾಹಕರನ್ನು ಒದಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಗೃಹಜ್ಯೋತಿ: 480516 ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದು, ರು.77600.58 ಲಕ್ಷ ವೆಚ್ಚ ಮಾಡಿದೆ. ಗೃಹಜ್ಯೋತಿ ಯೋಜನೆ ನವೀಕರಣ ಬಗ್ಗೆ ಜಿಲ್ಲೆಯಲ್ಲಿ ಶೇ.91.31 ರಷ್ಟು ಸರ್ವೇ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
ಗೃಹಲಕ್ಷ್ಮೀ: ಈ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ವಿವರವನ್ನು ಸಮರ್ಪಕವಾಗಿ ಪಡೆದು ಅವರ ಖಾತೆಗೆ ಹಣ ಹೋಗುವುದನ್ನು ನಿಲ್ಲಿಸಬೇಕು. ಈ ಕುರಿತು ಪ್ರತ್ಯೇಕ ಮಾರ್ಗೋಪಾಯಗಳ ಕುರಿತು ಸದಸ್ಯರು ಚರ್ಚೆ ನಡೆಸಿದರು.
ಅನ್ನಭಾಗ್ಯ ಯೋಜನೆಯಡಿ 5 ವರ್ಷದ ಹಿಂದೆ ಇಕೆವೈಸಿ ಮಾಡಿಸಿದ ಫಲಾನುಭವಿಗಳಿಗೆ ಮಾತ್ರ ಈಗ ಮತ್ತೆ ಇಕೆವೈಸಿ ಮಾಡಿಸಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದ್ದು, ಅದರನ್ವಯ ಮಾಡಿಸಲಾಗುತ್ತಿದೆ ಎಂದು ಆಹಾರ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಆರ್ ಶಿವಣ್ಣ, ಎಂ ಎಸ್ ಬಸವರಾಜಪ್ಪ, ಇಕ್ಕೇರಿ ರಮೇಶ್, ಸದಸ್ಯ ಅಮೀರ್ ಅಮ್ಜಾ, ಭವ್ಯ ಕೃಷ್ಣಮೂರ್ತಿ, ರಾಹುಲ್, ಅರ್ಚನಾ, ಯು ಶಿವಾನಂದ, ಎಚ್.ಎಂ. ಮಧು, ಎಚ್.ಬಿ. ಚಿದಂಬರ, ಬಿ.ಎಸ್.ಗಣೇಶ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.