ಕುಷ್ಟಗಿ: ಈ ಬಾರಿ ಬರಗಾಲ ಎದುರಾಗಿರುವುದರಿಂದ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಈ ಎರಡು ಸಮಸ್ಯೆಗಳನ್ನು ಎದುರಿಸಲು ತಾಲೂಕಾಡಳಿತ ತಂಡಗಳನ್ನು ರಚನೆ ಮಾಡಿಕೊಂಡು ಸನ್ನದ್ಧವಾಗಿದೆ.
ತಾಲೂಕಿನ 36 ಗ್ರಾಪಂಗಳ ಪೈಕಿ 173 ಗ್ರಾಮಗಳು ಬರುತ್ತಿದ್ದು, ಈ ಗ್ರಾಮಗಳಿಗೆ ಡಿಬಿಒಟಿ ಹಾಗೂ ಎಂವಿಎಸ್ ಯೋಜನೆ ಮೂಲಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಪ್ರಸಕ್ತವಾಗಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ 4 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಹುದು ಎಂದು ಅಂದಾಜಿಸಲಾಗಿದೆ.
ನೀರಿಗಾಗಿ ₹50 ಲಕ್ಷ: ತಾಲೂಕಿನಲ್ಲಿ ಒಟ್ಟು 473 ಸರ್ಕಾರಿ ಮತ್ತು 4206 ಖಾಸಗಿ ಬೋರ್ವೆಲ್ಗಳಿದ್ದು, ಅದರಲ್ಲಿ 315 ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದೆ. ಈ ಖಾಸಗಿ ಬೋರ್ವೆಲ್ಗಳ ಮಾಲೀಕರಿಂದ ಕರಾರು ಪತ್ರ ಮಾಡಿಸಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿಕೊಳ್ಳಲು ತಹಸೀಲ್ದಾರರ ಪಿಡಿ ಖಾತೆಯಲ್ಲಿ ತಲಾ ₹50 ಲಕ್ಷ ಕಾಯ್ದಿರಿಸಲಾಗಿದೆ.ಮೇವು ಬ್ಯಾಂಕ್: ತಾಲೂಕಿನಲ್ಲಿ ಇನ್ನೂ 83193.99 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, 22 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿದೆ. ಮೇವಿನ ಸಮಸ್ಯೆ ಉಂಟಾದರೆ ಮೇವಿನ ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಮೇವಿನ ಕಿಟ್ ನೀಡಲು ಸರ್ಕಾರದಿಂದ 5578 ಮಿನಿ ಕಿಟ್ಗಳು ಸರಬರಾಜು ಆಗಿದ್ದು, ಅದರಲ್ಲಿ 4881 ಕಿಟ್ಗಳನ್ನು ಅವಶ್ಯವಿರುವ ರೈತರಿಗೆ ನೀಡಲಾಗಿದೆ.
ಮಧ್ಯಂತರ ಪರಿಹಾರ: ರಾಜ್ಯ ಸರ್ಕಾರದಿಂದ ರೈತರಿಗೆ ಆಗಿರುವ ನಷ್ಟಕ್ಕೆ ₹2000ದಂತೆ ಮಧ್ಯಂತರ ಪರಿಹಾರ ನೀಡುತ್ತಿದ್ದು, ಇದುವರೆಗೆ 34,274 ರೈತರಿಗೆ ₹6.77 ಕೋಟಿ ಪರಿಹಾರವನ್ನು ಹಂತ ಹಂತವಾಗಿ ಡಿಬಿಟಿ ಮೂಲಕ ನೇರವಾಗಿ ಖಾತೆಗೆ ಜಮಾ ಮಾಡಲಾಗುತ್ತಿದೆ.
ಬೇಸಿಗೆಯ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ತೊಂದರೆಯಾಗದಂತೆ ತಾಲೂಕಾಡಳಿತದಿಂದ ಮುಂಜಾಗ್ರತೆಯಾಗಿ ಎಲ್ಲ ರೀತಿಯ ಕ್ರಮವನ್ನು ಕೈಗೊಂಡಿದ್ದು, ಬೇಸಿಗೆಯನ್ನು ಎದುರಿಸಲು ಸನ್ನದ್ಧವಾಗಿದೆ ಎನ್ನುತ್ತಾರೆ ತಹಸೀಲ್ದಾರ ರವಿ ಅಂಗಡಿ.