ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ರಂಗಮಂದಿರದ ದುಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ನಾನು ಜಂಗಮನಿದ್ದೇನೆ. ಜೋಳಿಗೆ ಹಾಕಿ ರಂಗಮಂದಿರದ ಅಭಿವೃದ್ಧಿ ಮಾಡುತ್ತೇನೆ ಎಂದು ಇತ್ತೀಚೆಗೆ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಬಿಜೆಪಿ ಮಾಜಿ ಶಾಸಕ ರಾಜಶೇಖರ ಶೀಲವಂತ ತೀವ್ರ ವ್ಯಂಗ್ಯವಾಡಿದ್ದಾರೆ. ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮದೇ ಸರ್ಕಾರ, ತಾವೇ ಸ್ವಪಕ್ಷದ ಜಿಲ್ಲಾಧ್ಯಕ್ಷರು, ತಮ್ಮದೇ ಪಕ್ಷದ ಭೀಮಸೇನ ಚಿಮ್ಮನಕಟ್ಟಿ ಶಾಸಕರಾಗಿದ್ದಾರೆ. ಇಷ್ಟಿದ್ದರೂ ಭಿಕ್ಷೆ ಬೇಡಿ ರಂಗಮಂದಿರ ಪೂರ್ಣಗೊಳಿಸುವುದು ನಾಚಿಕೆಗೇಡಿನ ಸಂಗತಿ. ಇದು ದುರ್ದೈವದ ವಿಚಾರ ಎಂದು ಟೀಕಿಸಿದ್ದಾರೆ.ಶೀಲವಂತ ಅವರ ಹೇಳಿಕೆಗೆ ತಿರುಗೇಟು ನೀಡಿರುವ ನಂಜಯ್ಯನಮಠ, ನಾನು ತಿಂಗಳಲ್ಲಿ ಎರಡು-ಮೂರು ಬಾರಿ ಗುಳೇದಗುಡ್ಡಕ್ಕೆ ಬಂದು ಹೋಗುತ್ತೇನೆ. ಆದರೆ ದಿನನಿತ್ಯ ಗುಳೇದಗುಡ್ಡದಲ್ಲೇ ಇರುವ ಮಾಜಿ ಶಾಸಕ ರಾಜಶೇಖರ ಶೀಲವಂತ ಅವರು ಕಂದಗಲ್ ಹನುಮಂತರಾಯರ ಬಯಲು ರಂಗಮಂದಿರದತ್ತ ಕಣ್ಣೆತ್ತಿಯೂ ನೋಡದಿರುವುದು ಯಾವ ರೀತಿಯ ನಾಚಿಕೆಗೇಡಿನ ಸಂಗತಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಶಾಸಕರಿಬ್ಬರ ನಡುವಿನ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ, ಕಂದಗಲ್ ಹನುಮಂತರಾಯರ ಹೆಸರಿನ ರಂಗಮಂದಿರ ಮಾತ್ರ ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಯತ್ತ ಸಾಗುತ್ತಿದೆ. ರಂಗಮಂದಿರ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.