ವಿಕಲಚೇತನರನ್ನು ಮುಖ್ಯವಾಹಿನಿಗೆ ತರಲು ಪೂರಕ ಕ್ರಮ ರೂಪಿಸಿ: ನ್ಯಾಯಾಧೀಶ ರಾಜೇಶ್ ಹೊಸಮನೆ

KannadaprabhaNewsNetwork |  
Published : Dec 04, 2025, 02:15 AM IST
ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿದರು.  | Kannada Prabha

ಸಾರಾಂಶ

ವಿಕಲಚೇತನರು ಸಹ ಈ ಸಮಾಜದ ಸಮರ್ಥ ಸೃಜನಶೀಲ ವಿಭಾಗ ಎಂದು ಭಾವಿಸಿ, ಅವರನ್ನು ಮುಖ್ಯವಾಹಿನಿಗೆ ತರಲು ಬೇಕಾದ ಎಲ್ಲ ಪೂರಕ ಕ್ರಮಗಳನ್ನು ರೂಪಿಸಿಕೊಳ್ಳಬೇಕು

ಬಳ್ಳಾರಿ: ವಿಕಲಚೇತನರು ಸಹ ಈ ಸಮಾಜದ ಸಮರ್ಥ ಸೃಜನಶೀಲ ವಿಭಾಗ ಎಂದು ಭಾವಿಸಿ, ಅವರನ್ನು ಮುಖ್ಯವಾಹಿನಿಗೆ ತರಲು ಬೇಕಾದ ಎಲ್ಲ ಪೂರಕ ಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ತಿಳಿಸಿದರು.ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರು ಅಶಕ್ತರಲ್ಲ. ಎಲ್ಲರಂತೆಯೇ ಅವರು ಸಹ ಸಮಾಜದ ಮುಖ್ಯವಾಹಿನಿಯಲ್ಲಿ ಪಾಲ್ಗೊಂಡು ಸ್ವಯಂ ಬದುಕು ಕಟ್ಟಿಕೊಳ್ಳಬೇಕಾಗಿದೆ. ಈ ದಿಸೆಯಲ್ಲಿ ಸರ್ಕಾರದ ಯೋಜನೆಗಳು ಸಹಕಾರಿಯಾಗಬೇಕು. ಸಂಘ-ಸಂಸ್ಥೆಗಳು ಸಹ ವಿಕಲಚೇತನರಿಗೆ ಬೇಕಾದ ಎಲ್ಲ ಅನುಕೂಲಗಳು, ವಿವಿಧ ಅವಕಾಶಗಳು ಆಸ್ಪದ ನೀಡಬೇಕು ಎಂದು ಸಲಹೆ ನೀಡಿದರು.

ದೈಹಿಕ-ಮಾನಸಿಕವಾಗಿ ಸದೃಢ ಇರುವ ಮನುಷ್ಯರು ಕಷ್ಟಕರ ಜೀವನ ನಡೆಸುತ್ತಿರುತ್ತಾರೆ. ಆದರೆ ವಿಕಲಚೇತನರು ಕಷ್ಟ-ನೋವು, ಅಸಹಾಯಕತೆಯ ಸಂದರ್ಭದಲ್ಲಿಯೂ ಯಾವುದೇ ಬೆಂಬಲವಿಲ್ಲದೇ ಛಲದಿಂದ ಜೀವನ ನಡೆಸಲು ಶಕ್ತರಾಗಿರುವುದು ಕಂಡು ಬರುತ್ತಿದೆ. ವಿಕಲಚೇತನರ ಪೋಷಕರು ಹಾಗೂ ಆರೈಕೆ ಮಾಡುವ ಆರೈಕೆದಾರರು ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವರೋ ಅದಕ್ಕೆ ಬೆಂಬಲ ನೀಡಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಜಿಲ್ಲೆಯಲ್ಲಿರುವ ಸ್ವಯಂ ಸೇವಾ ಸಂಸ್ಥೆಗಳು ವಿಕಲಚೇತನರನ್ನು ಮಕ್ಕಳಂತೆ ಆರೈಕೆ ಮಾಡಿ ನೋಡಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರ ಪಿ.ಗಾದೆಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಯಾಗಿ ಬದುಕುವ ಛಲ ಹೊಂದಿದ್ದಾರೆ. ಕರುಣೆ ತೋರದೇ ಅವರನ್ನು ಸಮಾನತೆಯಿಂದ ಕಾಣಬೇಕು. ಮಹಾನಗರ ಪಾಲಿಕೆಯ ಆಯ್ಯ-ವ್ಯಯ ಸಭೆ ಡಿ.9ಕ್ಕೆ ಜರುಗಲಿದೆ. ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಸಭೆಯಲ್ಲಿ ಭಾಗವಹಿಸಿ ತಮ್ಮ ಮನವಿಗಳು, ಬೇಡಿಕೆಗಳನ್ನು ಪ್ರಸ್ತಾಪಿಸಬಹುದು ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಿಸಲಾಯಿತು.

ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಬ್ರೂಸ್‌ಪೇಟೆ ಪಿಎಸ್‌ಐ ಮಹಾಂತೇಶ್, ಎಪಿಎಂಸಿ ಠಾಣೆಯ ಪಿಎಸ್‌ಐ ಮಹಮ್ಮದ್ ರಫೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್, ಶಿಕ್ಷಣ ಇಲಾಖೆಯ ಲಕ್ಷ್ಮಿದೇವಿ, ಜೆಎಸ್‌ಡಬ್ಲ್ಯು ತಮನ್ನಾ ಸಂಸ್ಥೆಯ ವಿಶೇಷಚೇತನರ ಶಾಲೆಯ ಸವಿತಾ, ವೈ.ಎಂ ಸತೀಶ್ ಫೌಂಡೇಶನ್ ಟ್ರಸ್ಟ್‌ನ ಕಾರ್ತಿಕ್, ನವತಾರೆ ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಜಾಫರ್ ಸಾದಿಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಸವಿತಾ, ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಎಚ್.ಎಂ. ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವಯಂ ಸೇವಕರು, ವಿಕಲಚೇತನರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಡಘಟ್ಟ ಗ್ರಾ.ಪಂ.ಗೆ ಗಾಂಧೀಗ್ರಾಮ ಪುರಸ್ಕಾರ: ರುದ್ರಮ್ಮ ಬಸವರಾಜು
ಕಳವಾಗಿದ್ದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ