ಕನ್ನಡಪ್ರಭ ವಾರ್ತೆ ಮೈಸೂರುಶ್ರೀ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು.ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಕಲಾಮಂದಿರದವರೆಗೆ ಅದ್ಧೂರಿಯಾಗಿ ನೆರವೇರಿತು. ಮಿನಿ ದಸರಾ ಮಾದರಿಯಲ್ಲಿ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹಿರಿಯ ಸಾಹಿತಿ ಡಾ.ಎಸ್.ಜಿ. ಸಿದ್ದರಾಮಯ್ಯ ಮತ್ತು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಅವರು ಮೆರವಣಿಗೆಗೆ ಚಾಲನೆ ನೀಡಿದರು.ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯನ್ನು ಮೆರವಣಿಗೆ ನಡೆಸಲಾಯಿತು. ಕಳಸ ಹೊತ್ತ ಮಹಿಳೆಯರು, ನಂದಿಧ್ವಜ ಕುಣಿತ, ಗಾರಡು ಗೊಂಬೆ, ಹುಲಿ ವೇಷಧಾರಿಗಳು, ಮಂಗಳವಾದ್ಯ, ಚಂಡೆ, ಡೊಳ್ಳು ಕುಣಿತ ಸೇರಿದಂತೆ ಅನೇಕ ಜಾನಪದ ಕಲಾತಂಡಗಳು ಪಾಲ್ಗೊಂಡು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಅರಮನೆ ಉತ್ತರ ದ್ವಾರದಿಂದ ಆರಂಭವಾದ ಮೆರವಣಿಯು, ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ, ಜೆಎಲ್ಬಿ ರಸ್ತೆ, ವಿನೋಭಾ ರಸ್ತೆಯ ಮೂಲಕ ಕಲಾಮಂದಿರ ತಲುಪಿತು.ಭೋವಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಮಹಿಳಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬಿರು ಬಿಸಿಲನ್ನೂ ಲೆಕ್ಕಿಸದೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಬಿಸಿಲಿನ ಝಳಕ್ಕೆ ಕಲಾವಿದರು ಸುಸ್ತಾಗಿ ಹೋದರು.ಸ್ಥಳೀಯ ಮುಖಂಡರಾದ ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮ್ ಮೊದಲಾದವರು ಇದ್ದರು.