ಧಾರವಾಡ: 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರವಾಡಕ್ಕೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜಿನಲ್ಲಿ ಈಗ 450ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ನೂತನ ಕಟ್ಟಡವು ₹3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಪ್ರಸ್ತುತ ಮಹಿಳೆಯರು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದರು.
ಈಗಿನ ಪೀಳಿಗೆ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಸಮಾಜ ಕಟ್ಟುವ ನಿರ್ಧಾರ ಮಾಡಿ, ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಮಹಿಳಾ ಕಾಲೇಜು ಉತ್ತಮ ಸ್ಥಳದಲ್ಲಿ ಆರಂಭವಾಗಿದೆ. ಸಾರ್ವಜನಿಕರ ಸ್ಪಂದನೆ ಚೆನ್ನಾಗಿದೆ. ದಿನದಿಂದ ದಿನಕ್ಕೆ ಮಹಿಳಾ ಕಾಲೇಜು ಬೆಳೆಯುತ್ತಿದೆ. ತಮ್ಮ ಶಾಸಕರ ಅನುದಾನದಲ್ಲಿ ಹಳೆಯ ಕಟ್ಟಡಕ್ಕೆ ತಾತ್ಕಾಲಿಕ ಹೊದಿಕೆ ಮಾಡಲಾಗಿದೆ. ನಿರಂತರ ಪ್ರಯತ್ನದ ಫಲವಾಗಿ ಇಂದು ನೂತನ ಕಟ್ಟಡದ ಕನಸು ನನಸಾಗಿದೆ ಎಂದರು.
ಕಾಲೇಜು ಪ್ರಾಂಶುಪಾಲ ಡಾ. ಎಸ್.ಎಸ್. ಅಂಗಡಿ ಸ್ವಾಗತಿಸಿದರು. ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ, ಹುಡಾ ಅಧ್ಯಕ್ಷ ಶಾಕೀರ ಸನದಿ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಮತ್ತಿತರರು ಇದ್ದರು.