ಎಬಿವಿಪಿಯಿಂದ ಉಚಿತ ಸಿಇಟಿ ತರಬೇತಿ ಸದ್ಭಳಕೆಗೆ ಸಲಹೆ

KannadaprabhaNewsNetwork | Published : Mar 27, 2024 1:06 AM

ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮೆಡಿಕಲ್, ಇಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಗತಿಗಳನ್ನು ಆಯೋಜಿಸಿರುವುದು ಶ್ಲಾಘನೀಯ.

ಬೀದರ್: ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮೆಡಿಕಲ್, ಇಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಗತಿಗಳನ್ನು ಆಯೋಜಿಸಿರುವುದು ಶ್ಲಾಘನೀಯ. ಈ ಭಾಗದ ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಪ್ರೊ.ಶಿವಕುಮಾರ ಕಟ್ಟೆ ಹೇಳಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ವತಿಯಿಂದ ನಗರದ ಕುಂಬಾರವಾಡ ಕಮಾನ್‌ ಎದುರು ಸನ್ ಸಾಫ್ಟ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ ಉಚಿತ ಸಿಇಟಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ದೊರಕುವಂತಾಗಬೇಕು ಈ ನಿಟ್ಟಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಿಇಟಿ ತರಗತಿಗಳು ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆ ಇದರಿಂದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಅನೂಕುಲವಾಗುತ್ತದೆ ಮತ್ತು ಇದನ್ನು ಪ್ರತಿವರ್ಷ ಆಯೋಜಿಸಬೇಕು ಎಂದು ಸಲಹೆ ನೀಡಿದರು.

ಎಬಿವಿಪಿ ನಗರ ಅಧ್ಯಕ್ಷ ಡಾ.ಸಂತೋಷ ಹಂಗರಗಿ ಮಾತನಾಡಿ, ಇಡಿ ದೇಶದಲ್ಲಿ ವಿದ್ಯಾರ್ಥಿಗಳ ಹಿತಕ್ಕಾಗಿ ಹೋರಾಡುತ್ತಾ ಜೊತೆಗೆ ಅನೇಕ ದೇಶಭಕ್ತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಈ ರೀತಿಯ ರಚನಾತ್ಮಕ ಚಟುವಟಿಕೆಗಳನ್ನು ಕೂಡ ಎಬಿವಿಪಿವತಿಯಿಂದ ಮಾಡಲಾಗುತ್ತಿದೆ ಎಂದರು.

ಎಬಿವಿಪಿ ಸಂಘಟನಾ ಕಾರ್ಯದರ್ಶಿ ಹೇಮಂತ ಮಾತನಾಡಿ, ಇಂದಿನಿಂದ ತರಬೇತಿ ಪ್ರಾರಂಭವಾಗಿದ್ದು, ನುರಿತ ಉಪನ್ಯಾಸಕರಿಂದ ಪ್ರತಿದಿನ ಆರು ಗಂಟೆಗಳ ಕಾಲ ತರಗತಿಗಳನ್ನು ನಡೆಸಲಾಗುತ್ತದೆ.

ಹೊಸ ಪಠ್ಯಕ್ರಮದ ಪ್ರಕಾರ ಅಧ್ಯಯನ ಸಾಮಗ್ರಿಗಳು ಮತ್ತು ಮುದ್ರಿತ ಟಿಪ್ಪಣಿಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುವುದು ಜೊತೆಗೆ ತರಬೇತಿಗಳ ನಡುವೆ ಪರೀಕ್ಷೆಗಳನ್ನೂ ಕೂಡ ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ತಿನ ಹಿರಿಯರಾದ ಗುರುನಾಥ ರಾಜಗೀರಾ, ಜಿಲ್ಲಾ ಸಂಚಾಲಕ ಶಶಿಕಾಂತ್ ರಾಕ್ಲೆ, ನಗರ ಸಹ ಕಾರ್ಯದರ್ಶಿ ರಬೇಕಾ , ಶಿವಾನಿ, ಸಂಗೀತ , ನಾಗರಾಜ್, ಪವನ್ ಕುಂಬಾರ್, ಅಭಿಷೇಕ್ ಶಂಬು ಸೇರಿದಂತೆ ಇತರರಿದ್ದರು.