ಹಾವೇರಿ ಜಿಲ್ಲೆಯಲ್ಲಿ ಮಣ್ಣೆತ್ತಿನ ಅಮಾವಾಸ್ಯೆಗೆ ಭರದ ಸಿದ್ಧತೆ

KannadaprabhaNewsNetwork |  
Published : Jul 05, 2024, 12:55 AM IST
ಹಾವೇರಿಯಲ್ಲಿ ಮಣ್ಣೆತ್ತಿನ ಅಮಾವಾಸ್ಯೆ | Kannada Prabha

ಸಾರಾಂಶ

ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮಾವಾಸ್ಯೆ ದಿನ ರೈತರು ಮಣ್ಣಿನ ಎತ್ತುಗಳನ್ನು ವಿಶೇಷವಾಗಿ ಪೂಜಿಸುತ್ತಾರೆ. ಹಾವೇರಿ ಜಿಲ್ಲೆಯಲ್ಲಿ ಜು. 5ರಂದು ಮಣ್ಣೆತ್ತಿನ ಅಮಾವಾಸ್ಯೆ ಸರಗರದಿಂದ ನಡೆಯುತ್ತಿದೆ.

ಹಾವೇರಿ: ಜಿಲ್ಲೆಯ ರೈತರು ಶುಕ್ರವಾರ ಮಣ್ಣೆತ್ತಿನ ಅಮಾವಾಸ್ಯೆಗೆ ಭರದ ಸಿದ್ಧತೆಯಲ್ಲಿ ತೊಡಗಿರುವುದು ಜಿಲ್ಲೆಯಾದ್ಯಂತ ಕಂಡು ಬಂದಿದೆ.ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮಾವಾಸ್ಯೆ ದಿನ ರೈತರು ಮಣ್ಣಿನ ಎತ್ತುಗಳನ್ನು ಪೂಜಿಸುತ್ತಾರೆ.

ಉತ್ತರ ಕರ್ನಾಟಕ ರೈತಾಪಿ ವರ್ಗಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ಎಂದರೆ ಎಲ್ಲಿಲ್ಲದ ಸುಗ್ಗಿ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರು ಪಾಲ್ಗೊಂಡು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ. ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳು ಮತ್ತು ಪಟ್ಟಣಗಳಲ್ಲಿ ಕುಂಬಾರ ಸಮುದಾಯದ ಮಹಿಳೆಯರು, ಮಕ್ಕಳು ಎಲ್ಲ ಸದಸ್ಯರು ಸೇರಿ ಕೆರೆಯ ಜಿಗುಟಾದ ಕರಿ ಮಣ್ಣಿನಲ್ಲಿ ಎತ್ತುಗಳನ್ನು ತಯಾರಿಸುತ್ತಾರೆ. ಈ ಮಣ್ಣಿನ ಎತ್ತುಗಳ ಕೊಡುಗಳಿಗೆ ಬಣ್ಣಹಚ್ಚಿ, ಕೊರಳಲ್ಲಿ ಗೆಜ್ಜೆ, ಅಲಂಕಾರ ಆಭರಣ ಹಾಕಿದ ರೀತಿಯಲ್ಲಿ ನೂರಾರು ಬಸವಣ್ಣನ ಮೂರ್ತಿಗಳನ್ನು ಸಿದ್ಧಪಡಿಸುತ್ತಾರೆ. ಗುರುವಾರ ನಗರದ ಕುಂಬಾರ ಓಣಿ, ಎಂ.ಜಿ. ರೋಡ್‌ ಸೇರಿದಂತೆ ವಿವಿಧ ಭಾಗಗಳಲ್ಲಿ ಜೋಡಿಗೆ ₹15ರಿಂದ ₹40ಗಳಿಗೆ ಮಾರಾಟ ಮಾಡುವ ದೃಶ್ಯ ಕಂಡು ಬಂದಿತು.

ಧಾರ್ಮಿಕ ನೆಲೆಗಟ್ಟಿನ ನಂಬಿಕೆ ಮೇಲೆ ಬದುಕು ಸಾಗಿಸುವ ರೈತರ ಮುಖ್ಯ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮಾವಾಸ್ಯೆ ಪ್ರಯುಕ್ತ ಕುಂಬಾರರು ಜೋಡೆತ್ತಿನ ಬಸವಣ್ಣನ ಮಣ್ಣಿನ ಮೂರ್ತಿಗಳನ್ನು ಪೂಜೆಗೆ ಸಜ್ಜುಗೊಳಿಸಿದ್ದಾರೆ. ಸಿದ್ಧಪಡಿಸಿರುವ ಬಸವಣ್ಣನ ಮೂರ್ತಿಗಳಿಗೆ ರೈತರು ಹಣ, ಜೋಳ, ದವಸ ಧಾನ್ಯ, ಅಕ್ಕಡಿಕಾಳು ಕುಂಬಾರರಿಗೆ ಕೊಟ್ಟು ಮಣ್ಣಿನ ಬಸವಣ್ಣನ ಮೂರ್ತಿಗಳನ್ನು ಪಡೆಯುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ.

ಮಣ್ಣಿನಿಂದ ತಯಾರಿಸಲಾದ ಎತ್ತುಗಳನ್ನು ಮನೆಯ ದೇವರ ಜಗಲಿಯ ಮೇಲೆ ಪ್ರತಿಷ್ಠಾಪನೆಗೊಳಿಸುತ್ತಾರೆ. ರೈತನ ಎತ್ತುಗಳೊಂದಿಗೆ ಈ ಮಣ್ಣಿನ ಎತ್ತುಗಳಿಗೆ ವಿಶೇಷ ಪೂಜೆ ಜರುಗುತ್ತದೆ. ಈ ಸಂಭ್ರಮಾಚರಣೆಯಲ್ಲಿ ಮನೆಯಲ್ಲಿನ ಮಕ್ಕಳು, ಮಹಿಳೆಯರು ಕುಟುಂಬದ ಎಲ್ಲರೂ ಪಾಲ್ಗೊಂಡು ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆಯುತ್ತಾರೆ.

ಗ್ರಾಮೀಣ ಪ್ರದೇಶದಲ್ಲಿ ಮಕ್ಕಳೆಲ್ಲರೂ ಸೇರಿ ಚಿಕ್ಕದೊಂದು ಬುಟ್ಟಿಯಲ್ಲಿ ಮಣ್ಣಿನ ಎತ್ತುಗಳನ್ನು ಹಿಡಿದುಕೊಂಡು ಗ್ರಾಮದಲ್ಲಿನ ಮನೆ ಮನೆಗೆ ಹೋಗಿ ಆರತಿ ಮಾಡಿಸಿಕೊಳ್ಳುವ ಪ್ರತೀತಿಯಿದೆ. ಅಲ್ಲದೇ ಈ ಸಂದರ್ಭದಲ್ಲಿ ಮಹಿಳೆಯರು ಎತ್ತಿಗೆ ಆರತಿ ಮಾಡಿ ದವಸ-ಧಾನ್ಯಗಳನ್ನು ಉಡುಗೊರೆಯಾಗಿ ನೀಡುವ ಪದ್ಧತಿ ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಕಾಣಸಿಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ