ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಗತ್ಯ ಅನುದಾನ

KannadaprabhaNewsNetwork |  
Published : Feb 23, 2026, 01:45 AM IST
ಚಿತ್ರ 1 | Kannada Prabha

ಸಾರಾಂಶ

ವಕೀಲರ ಸಂಘದ ನೂತನ ಕಂಪ್ಯೂಟರ್ ಕೊಠಡಿಯನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲಾ ನ್ಯಾಯಾಲಯ ಸ್ಥಾಪಿಸಿ ಶತಮಾನವಾಗುತ್ತಿದ್ದು ವಕೀಲರ ಸಂಘದ ಮನವಿಯಂತೆ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಗತ್ಯವಾದ ಅನುದಾನ ಕೊಡಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಸಂಸದ ಗೋವಿಂದ ಎಂ.ಕಾರಜೋಳ ಭರವಸೆ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಂಘದ ನೂತನ ಕಂಪ್ಯೂಟರ್ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಕಕ್ಷಿದಾರರೇ ನಮಗೆ ಮತದಾರರು. ಅವರ ಹಿತ ಕಾಯುವುದು ಸಂಸದರ ಮತ್ತು ವಕೀಲರ ಕರ್ತವ್ಯ. ಈ ಹಿನ್ನೆಲೆಯಲ್ಲಿ ನಿಮ್ಮೊಂದಿಗೆ ಸದಾ ಇರುವೆ ಎಂದರು.

ಜಿಲ್ಲೆಯಲ್ಲಿ ಬಿಸಿಲಿನ ತಾಪ ಬೇಸಿಗೆಯಲ್ಲಿ ಹೆಚ್ಚಾಗಿರುತ್ತದೆ. ಹೀಗಾಗಿ ವಕೀಲರ ಸುರಕ್ಷತೆ ಹಿನ್ನೆಲೆಯಲ್ಲಿ ಕೊಠಡಿಯನ್ನು ಇನ್ನಷ್ಟು ಉತ್ತಮವಾಗಿ ತಂಪಾಗಿರುವಂತೆ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜ್ ಅವರಿಗೆ ಸಂಸದರು ಸೂಚಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಮಾತನಾಡಿ, ಚಿತ್ರದುರ್ಗ ಜಿಲ್ಲೆ ತಂತ್ರಜ್ಞಾನ ಬಳಕೆಯಲ್ಲಿ ಹಿಂದುಳಿದಿದೆ. ನ್ಯಾಯಾಲಯದಲ್ಲಿ ಮುಂದಿನ ದಿನಗಳಲ್ಲಿ ನಿರೀಕ್ಷಣಾ ಜಾಮೀನು ಮತ್ತು ಜಾಮೀನು ಎರಡನ್ನೂ ಆನ್‍ಲೈನ್‍ನಲ್ಲೇ ಮಾಡುವ ಹಿನ್ನೆಲೆಯಲ್ಲಿ ಎಲ್ಲರೂ ಕಂಪ್ಯೂಟರ್ ಕೊಠಡಿಯನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಸಂಸದರು ವಕೀಲರ ಪರವಾಗಿ ಧ್ವನಿ ಎತ್ತಬೇಕು.

60 ವಯಸ್ಸಿನ ನಂತರ ಪಿಂಚಣಿ ಹಾಗೂ ಜಿಲ್ಲೆಯಲ್ಲಿ ವಕೀಲರಿಗೆ ಸಮುದಾಯ ಭವನ ಅಗತ್ಯವಾಗಿದ್ದು ಕೂಡಲೇ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಎಚ್.ಓ.ಜಗದೀಶ ಗುಂಡೇರಿ, ಖಜಾಂಚಿ ಎಚ್.ಸೋಮಶೇಖರ್ ರೆಡ್ಡಿ, ಸಹ ಕಾರ್ಯದರ್ಶಿ ಎಚ್.ಟಿ ಕಾಂತರಾಜ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರು, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿವಿಲ್‌ ನ್ಯಾಯಾಧೀಶರಾಗಿ ಮಾಳೇನಳ್ಳಿಯ ಮಣಿಕಂಠ ಆಯ್ಕೆ
ಚೆಸ್‌ಕ್ರೀಡೆ ಮಕ್ಕಳ ಬುದ್ದಿ ವಿಕಸನಕ್ಕೆ ಸಹಕಾರಿ