ಹಳ್ಳಿಧ್ವನಿ । ಎಂ.ಟಿ.ಕೃಷ್ಣೇಗೌಡ ಸಲಹೆ । ಹಾಸನ ಆಕಾಶವಾಣಿ ಕೇಂದ್ರದಿಂದ ರೇಡಿಯೋ ಕಿಸಾನ್ ದಿವಸ-24ಕನ್ನಡಪ್ರಭ ವಾರ್ತೆ ಅರಕಲಗೂಡು
ತಾಲೂಕಿನ ಮಲ್ಲಿಪಟ್ಟಣದಲ್ಲಿ ಹಾಸನ ಆಕಾಶವಾಣಿ ಕೇಂದ್ರದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಮಳೆ ಪ್ರಮಾಣ ಕ್ಷೀಣಿಸುತ್ತಿದೆ. ಅತ್ಯಂತ ಕಡಿಮೆ ಮಳೆ ಬೀಳುವ ಇಸ್ರೇಲ್ ದೇಶ ಅತ್ಯುನ್ನತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಕಡಿಮೆ ನೀರಿನಲ್ಲಿಯೇ ಹೆಚ್ಚು ಕೃಷಿ ಉತ್ಪನ್ನ ಪಡೆಯುತ್ತದೆ. ನೀರಿನ ಕುರಿತ ಜಾಗೃತಿ ಆ ದೇಶದ ಕೃಷಿಕರಲ್ಲಿ ಅತ್ಯಧಿಕವಾಗಿದೆ. ಅಂತಹ ಅರಿವು ಇಲ್ಲಿನ ರೈತರಲ್ಲಿಯೂ ಮೂಡಬೇಕು. ಇಲ್ಲಿ ನೀರೂ ಸೇರಿದಂತೆ ಇತರೆ ನೈಸರ್ಗಿಕ ಸಂಪನ್ಮೂಲಗಳು ಹೇರಳವಾಗಿ ದೊರೆಯುತ್ತಿವೆ. ಅವುಗಳನ್ನು ಲಭ್ಯವಿರುವ ತಂತ್ರಜ್ಞಾನದೊಂದಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಡಾ. ವಿಜಯ್ ಅಂಗಡಿ ಮಾತನಾಡಿ, ಹಳ್ಳಿ ಧ್ವನಿ ಆಕಾಶವಾಣಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಹಳ್ಳಿಗಳ ವಸ್ತುಸ್ಥಿತಿಯನ್ನು ಅರಿಯುವ ಸಲುವಾಗಿ ಇದನ್ನು ರೂಪಿಸಲಾಗಿದೆ. ಹಳ್ಳಿ ಧ್ವನಿಯ ಮೂಲಕ ಹಳ್ಳಿಗಳ ಇತಿಹಾಸ, ಅಲ್ಲಿನ ಜನ ಜೀವನವನ್ನು ತಿಳಿಯುವ ಹಾಗೂ ಆಕಾಶವಾಣಿಯ ಕೇಳುಗರಿಗೆ ತಲುಪಿಸಿ ಅದನ್ನು ದಾಖಲಿಸುವ ಕೆಲಸವನ್ನು ಆಕಾಶವಾಣಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.ಪರಿಸರಪ್ರಿಯ ಉತ್ಪನ್ನಗಳ ಮಹತ್ವ ಕುರಿತು ಆಕಾಶವಾಣಿ ನಿರ್ವಾಹಕ ಮಧುಸೂದನ್ ಮಾಹಿತಿ ನೀಡಿದರು. ಅಂಚೆ ಇಲಾಖೆಯ ನಿವೃತ್ತ ನೌಕರ ಚಂದ್ರಶೇಖರ್ ಸ್ಥಳೀಯ ಸಾಧಕರ ಸಾಧನೆಗಳನ್ನು ವಿವರಿಸಿದರು. ಸಂಘ ಸಂಸ್ಥೆಗಳು ಹಾಗೂ ದೇವಾಲಯಗಳ ಪರಿಚಯ ಕುರಿತು ಸಮಾಜ ಸೇವಕ ಎಂ.ಟಿ. ಹುಲ್ಮನೆ ಮಂಜುನಾಥ್ ಮಾಹಿತಿ ನೀಡಿದರು. ತಾಲೂಕಿನ ಗಡಿ ಗ್ರಾಮಗಳಲ್ಲಿ ಬಾಧಿಸುತ್ತಿರುವ ಆನೆ ಸಮಸ್ಯೆಯ ಆರಂಭ, ಉಪಟಳ ಹಾಗೂ ಪರಿಹಾರಗಳನ್ನು ಕುರಿತು ಸರ್ಕಾರ ನೆರವಿಗೆ ಧಾವಿಸುವಂತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಆಗ್ರಹಿಸಿದರು.
ಹಾಸನದ ಡಾ. ಶಿವಪ್ರಸಾದ್ ನೇತ್ರಾಲಯದ ತಂಡ ಉಚಿತ ಕಣ್ಣು ಪರೀಕ್ಷೆ ನಡೆಸಿತು. ಕೃಷಿ ಸಾಧಕರಾದ ಎಂ.ಟಿ. ಕೃಷ್ಣೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ಅವರನ್ನು ಸನ್ಮಾನಿಸಲಾಯಿತು.