ಹೊಸಪೇಟೆ: ವಿಜಯನಗರ ಜಿಲ್ಲೆಯಾದ್ಯಂತ ಶನಿವಾರ ಸಂಜೆ ಗಣಪತಿ ಬಪ್ಪಾ ಮೋರಯಾ, ಮಂಗಳ ಮೂರ್ತಿ ಮೋರಯಾ ಎಂಬ ಘೋಷಣೆಯೊಂದಿಗೆ ಗಣಪತಿ ಮೂರ್ತಿಯನ್ನು ವಿನಾಯಕ ಮಂಡಳಿ ಸಮಿತಿಗಳ ಸದಸ್ಯರು ಪ್ರತಿಷ್ಠಾಪಿಸಿದರು. ಜಿಲ್ಲೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ಗಣೇಶನ ಪ್ರತಿಷ್ಠಾಪನೆ:
ನಗರದಾದ್ಯಂತ ಮನೆ, ಮನೆಗಳಲ್ಲಿ ಗಣೇಶನನ್ನು ಸ್ಥಾಪಿಸಲಾಯಿತು. ಮೂರ್ತಿ ಮಾರಾಟಗಾರರ ಮನೆಗಳು, ಅಂಗಡಿಗಳಲ್ಲಿ ಭಾರೀ ಜನಜಂಗುಳಿ ಕಂಡು ಬಂದಿತು. ಗಣೇಶನ ಮೂರ್ತಿಗೆ ತಿಲಕವಿರಿಸಿದ ಜನರು ಗಣಪತಿ ಬಪ್ಪಾ ಮೋರಯಾ ಎಂಬ ಘೋಷಣೆಯೊಂದಿಗೆ ಮನೆಗೆ ಕರೆತಂದರು. ಪಟಾಕಿಗಳು, ಆಟಂ ಬಾಂಬ್ಗಳ ಸಿಡಿತ ಜೋರಾಗಿ ಕೇಳಿಬಂದಿತು. ವಿವಿಧ ಸಾರ್ವಜನಿಕ ಗಣೇಶ ಮಂಡಳಿಗಳು ಅನ್ನ ಸಂತರ್ಪಣೆ ಆಯೋಜಿಸಿದ್ದವು. ಒಂದು ದಿನ ಮಾತ್ರ ಸ್ಥಾಪಿಸಲಾಗುವ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನಗರದಲ್ಲಿ ಸಂಜೆ ಕೈಗೊಳ್ಳಲಾಯಿತು. ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.ಜಿಲ್ಲಾದ್ಯಂತ ಪಿಒಪಿ ಗಣೇಶ ಮೂರ್ತಿ ನಿಷೇಧಿಸಿದ್ದರಿಂದ ಜಿಲ್ಲಾಡಳಿತದ ಪ್ರಯತ್ನಕ್ಕೆ ಬಹುತೇಕ ಯಶಸ್ಸು ದೊರೆಯಿತು. ಹಬ್ಬದ ಒಂದು ತಿಂಗಳು ಮೊದಲೇ ಜಿಲ್ಲಾಡಳಿತ ಪಿಒಪಿ ಮೂರ್ತಿ ನಿಷೇಧಿಸಿ ಆದೇಶ ಹೊರಡಿಸಿತ್ತು. ಹೀಗಾಗಿ ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಾಯಿತು. ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಸಾರ್ವಜನಿಕರು ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪರಿಸರ ಪ್ರೇಮ ಮೆರೆದರು.