ಕನ್ನಡಪ್ರಭ ವಾರ್ತೆ ಮಂಗಳೂರು
ವಿಧಾನ ಪರಿಷತ್ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು, ರಾಜಕಾರಣಿಗಳು ಇಲ್ಲದೆ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಎಲ್ಲರ ಮೇಲೂ ಪ್ರಭಾವ ಬೀರುವಂಥ ಚಿಂತನೆ ಗಾಂಧೀಜಿಯವರದ್ದು. ಅವರ ಬದುಕು ಮತ್ತು ಚಿಂತನೆಗಳಿಂದ ನಾವೆಲ್ಲರೂ ಪ್ರೇರಣೆ ಪಡೆಯಬೇಕು. ಮಹಾತ್ಮರು ನೀಡಿದ ಸ್ವಾತಂತ್ರ್ಯ, ಇಂದು ನಾವು ಬದುಕುತ್ತಿರುವ ಸಮಾಜವನ್ನು, ದೇಶವನ್ನು ಮುಂದಿನ ಪೀಳಿಗೆಗೆ ನೀಡಬೇಕಾದರೆ ನಾವು ಗಾಂಧೀಜಿಯವರ ಬದುಕು ಅವರ ಚಿಂತನೆಗಳಿಂದ ಪ್ರೇರೇಪಣೆ ಆಗಬೇಕು. ವಿಶ್ವದ ಪ್ರತಿ ನಾಯಕನ ಹಿಂದೆ ಗಾಂಧೀಜಿಯ ಚಿಂತನೆ, ಆತ್ಮವಿಶ್ವಾಸ ಮತ್ತು ಒಗ್ಗಟ್ಟಿನ ತತ್ವಗಳು ಅಡಕವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಪೊಲೀಸ್ ಅಧೀಕ್ಷಕ ಯತೀಶ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಭಾರತ ಸೇವಾದಳದ ಜಯರಾಮ ರೈ, ಬಶೀರ್ ಬೈಕಂಪಾಡಿ, ಮಂಜೇಗೌಡ ಮತ್ತಿತರರು ಇದ್ದರು.
ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವಚ್ಛತಾ ಹಿ ಸೇವಾ ಆಂದೋಲನದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯ್ತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭ ಸ್ವಚ್ಛತಾ ಪ್ರಮಾಣವಚನ ಸ್ವೀಕರಿಸಲಾಯಿತು.