ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ದಿಡಗ ಗ್ರಾಮದ ಸುವರ್ಣ ಭವನದಲ್ಲಿ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಗಾಂಧಿ ತತ್ವ ಪ್ರಣಿತ ಯುವಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಸಮಾಜದಲ್ಲಿ ಪ್ರಜೆಗಳೇ ಪ್ರಭುಗಳು ಎಂದರು. ಸದ್ಯದ ಪರಿಸ್ಥಿತಿಯಲ್ಲಿ ಸಮಾಜವು ಮೊದಲಿನಂತಿಲ್ಲ. ಸ್ವಾಸ್ಥ್ಯ ಹದಗಿಟ್ಟಿದೆ. ಉತ್ತಮ ಸಂಸ್ಕೃತಿ ನಿರ್ಮಾಣವಾಗಬೇಕು. ಬದುಕು ಹಾಗೂ ನಮ್ಮ ನಡೆ ಪರಿಣಾಮಕಾರಿಯಾಗಬೇಕು. ಪ್ರತಿಭಾನ್ವಿತರಿಗೆ ಸಹಕಾರ ನೀಡುವುದರ ಜೊತೆಗೆ ಯಾರು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ತಿಳಿಸಿದರು.
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಮಹಾತ್ಮ ಗಾಂಧೀಜಿಯವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಅವರ ಆದರ್ಶ ಹಾಗೂ ತತ್ವ ಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರ ಹೋರಾಟದ ಫಲವಾಗಿ ಇಂದು ನಾವು ಸ್ವತಂತ್ರರಾಗಿ ಬದುಕು ಕಟ್ಟಿಕೊಂಡಿದ್ದೇನೆ. ಈ ಭೂಮಿ ಹಾಗೂ ಪ್ರಪಂಚ ಇರುವವರೆಗೂ ಅವರ ಹೆಸರು ಶಾಶ್ವತವಾಗಿ ಉಳಿದಿರುತ್ತದೆ. ಮಹಾತ್ಮ ಗಾಂಧೀಜಿಯವರ ಚಿಂತನೆ ಹಾಗೂ ಸ್ವಾತಂತ್ರ ಹೋರಾಟ ಎಂದಿಗೂ ಮರೆಯುವಂತಿಲ್ಲ ಎಂದು ಬಣ್ಣಿಸಿದರು. ಯಾವುದೇ ವ್ಯಕ್ತಿಯು ಯಶಸ್ಸಿನ ಮೆಟ್ಟಿಲು ಹತ್ತುವಾಗ ಹಿಂದಿರುಗಿ ನೋಡಬಾರದು. ಯಶಸ್ಸು ಕಂಡ ನಂತರ ತಾನು ನಡೆದು ಬಂದ ದಾರಿಯನ್ನು ಹಿಂದಿರುಗಿ ನೋಡುವುದನ್ನು ಮರೆಯಬಾರದು. ಒಳ್ಳೆಯ ಸ್ನೇಹಿತರು ಸಿಗಲಿಲ್ಲವಾದಲ್ಲಿ ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಿ. ವಿಚಾರಧಾರೆಗಳಿಂದ ನೀವು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಮಹಾತ್ಮ ಗಾಂಧೀಜಿಯವರ ದೇಹವನ್ನು ಸುಲಭವಾಗಿ ಕೊಂದಿರಬಹುದು. ಆದರೆ ಅವರ ಆದರ್ಶಗಳು, ತತ್ವ ಸಂದೇಶಗಳು ಹಾಗೂ ವಿಚಾರಧಾರೆಗಳನ್ನು ಯಾರಿಂದಲೂ, ಎಂದಿಗೂ ಸಹ ಕೊಲ್ಲಲು ಸಾಧ್ಯವಿಲ್ಲ ಎಂದರು. ಪ್ರಪಂಚದಲ್ಲಿ ಮಾನವೀಯತೆಯ ಮೌಲ್ಯ ಇರುವವರೆಗೂ ಹಾಗೂ ಗಾಂಧಿ ವಾದಿಗಳು ಬದುಕಿರುವವರೆಗೂ ಮಹಾತ್ಮ ಗಾಂಧೀಜಿಯವರ ಹೆಸರು ಹಾಗೂ ವಿಚಾರಧಾರೆಗಳು ಉಳಿಯಲಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮರ ಬಗ್ಗೆ ಅವಹೇಳನಾಕಾರಿ ಹಾಗೂ ಇಲ್ಲಸಲ್ಲದ ಮಾತುಗಳನ್ನಾಡುವ ಕೆಲ ಮಂದಿ ಇದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಕೆ.ಚಂದ್ರು, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟರಾಜು, ಎಂ. ಆರ್. ವಾಸು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸತೀಶ್, ಇಸಿಒ ಅನಿಲ್ ಕುಮಾರ್, ದಿಡಗ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಆರ್. ಮಂಜುನಾಥ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನೀಲಿಸಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ. ಎಸ್. ಪ್ರಕಾಶ್, ಮಾಜಿ ಸದಸ್ಯರಾದ ಜ್ಯೋತಿಶ್, ಸೌಮ್ಯ ಗವಿಶ್, ಪ್ರಮುಖರಾದ ಯೋಗೇಶ್, ದಿನೇಶ್, ಉಮೇಶ್ ಬಳಗಾರ ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.