ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಿರುವುದು ಶ್ಲಾಘನೀಯ. ಇಂತಹ ಮಹತ್ವದ ಕಾರ್ಯವನ್ನು ಬೇರೆಲ್ಲೋ ನಡೆಸುವುದಕ್ಕಿಂತ ಕಾವೇರಿಯ ನಾಡು ಕೊಡಗಿನಲ್ಲಿ ನಡೆಸಿದಲ್ಲಿ ಅದಕ್ಕೊಂದು ಐತಿಹಾಸಿಕ, ಧಾರ್ಮಿಕ ಹಿನ್ನೆಲೆ ಇರುತ್ತದೆ ಎಂದರು.
ಕಾವೇರಿ ಆರತಿ ಕಾರ್ಯಕ್ರಮವನ್ನು ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಸಂಗಮ ಕ್ಷೇತ್ರವಾದ ಭಾಗಮಂಡಲ, ನದಿ ಪಾತ್ರದ ಪವಿತ್ರ ಸ್ಥಳವಾದ ಕಣಿವೆ, ಬಲಮುರಿ, ಗುಹ್ಯ ಕ್ಷೇತ್ರಗಳಲ್ಲಿಯೂ ನಡೆಸಬಹುದಾಗಿದೆ. ಇಂತಹ ಸ್ಥಳಗಳಲ್ಲಿ ಕಾವೇರಿ ಆರತಿ ನಡೆಸಿದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಿದಂತೆ ಆಗುತ್ತದಲ್ಲದೆ, ಮೇಲ್ಪಂಕ್ತಿಯನ್ನು ಹಾಕಿಕೊಟ್ಟಂತಾಗುತ್ತದೆ ಎಂದರು.ಕಾವೇರಿ ಆರತಿಯನ್ನು ಕೊಡಗಿನಲ್ಲಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಇಬ್ಬರು ಶಾಸಕರು, ಎಂಎಲ್ಸಿ ಅವರೊಂದಿಗೆ ಸಮಾಲೋಚಿಸಿ ಮುಖ್ಯ ಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಯನ್ನು ಸಂಪರ್ಕಿಸಿ, ಕೊಡಗಿನಲ್ಲಿ ಕಾವೇರಿ ಆರತಿ ಆಯೋಜನೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗುವುದು ಎಂದರು.
ಕಾವೇರಿ ರಿವರ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಮಂಡೇಪಂಡ ಬೋಸ್ ಮಂದಣ್ಣ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೂರನ ಪ್ರಕಾಶ್ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಉಪಾಧ್ಯಕ್ಷ ಡಿ.ಆರ್.ಸೋಮಶೇಖರ್ ಇದ್ದರು.