ಉಡುಪಿ - ಫೆಬ್ರವರಿ ತಿಂಗಳಲ್ಲಿ ಗ್ಯಾರಂಟಿ ಸಮಾವೇಶ: ಅಶೋಕ್ ಕುಮಾರ್

KannadaprabhaNewsNetwork |  
Published : Feb 04, 2026, 03:00 AM IST
ಜಿಪಂ ಸಭಾಂಗಣದಲ್ಲಿ ಜಿಲ್ಲಾ ಗ್ಯಾಂರಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ನಡೆಯಿತು.  | Kannada Prabha

ಸಾರಾಂಶ

ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಿಗೆ ವ್ಯಾಪಕ ಪ್ರಚಾರ ನೀಡಿ, ಅವುಗಳ ಲಾಭವನ್ನು ತಳಮಟ್ಟದ ಜನರಿಗೆ ತಲುಪಿಸುವುದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಎಲ್ಲ ತಾಲೂಕುಗಳ ಮಟ್ಟದ ಸಮಾವೇಶಗಳನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಕ್ತಿ ಯೋಜನೆಯಡಿ ಡಿಸೆಂಬರ್ 2025 ರವರೆಗೆ ಉಡುಪಿ - ಕುಂದಾಪುರ ಡಿಪೋಗಳಿಂದ ಕಾರ್ಯಾಚರಿಸುವ ಬಸ್ಸುಗಳಲ್ಲಿ ಒಟ್ಟು 3.53 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಒಟ್ಟು 137.59 ಕೋಟಿ ರೂ. ಮೊತ್ತದ ವೆಚ್ಚ ಭರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ಅಂತ್ಯದವರೆಗೆ 2,24,636 ಮಹಿಳಾ ಫಲಾನುಭವಿಗಳಿಗೆ 1050.90 ಕೋಟಿ ರು. ಪಾವತಿಸಲಾಗಿರುತ್ತದೆ. ಗೃಹಜ್ಯೋತಿ ಯೋಜನೆಯಡಿ 3,80,040 ಮನೆಗಳ ಪೈಕಿ 3,00,642 ಮನೆಗಳಿಗೆ ಉಚಿತ ವಿದ್ಯುತ್ ನೀಡಿದ್ದು, ಸರ್ಕಾರ 591.07 ಕೋಟಿ ರು. ಪಾವತಿಸಿದೆ. ಅನ್ನಭಾಗ್ಯ ಯೋಜನೆಯಡಿ ಜನವರಿ ಅಂತ್ಯದವರೆಗೆ ಒಟ್ಟು 1,87,576 ಪಡಿತರ ಚೀಟಿದಾರರಿಗೆ 39771.40 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಡಿಸೆಂಬರ್ ವರೆಗೆ 4274 ಯುವಜನರು ನೊಂದಣಿಮಾಡಿಕೊಂಡಿದ್ದು, 3350 ಮಂದಿಗೆ 8.54 ಕೋಟಿ ರು. ಗಳನ್ನು ಅವರ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸ್ವಸಹಾಯ ಗುಂಪುಗಳನ್ನು ರಚಿಸಿ ಸರ್ಕಾರದ ವಿವಿಧ ಯೋಜನೆಗಳೊಂದಿಗೆ ಒಗ್ಗೂಡಿಸಿಕೊಂಡು ವಿವಿಧ ಆದಾಯ - ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದ್ದು, ಈ ಕುರಿತು ಆದಷ್ಟು ಶೀಘ್ರದಲ್ಲಿ ಗುಂಪುಗಳನ್ನು ರಚನೆ ಮಾಡುವಂತೆ ಸಮಿತಿಯ ಸದಸ್ಯರಿಗೆ ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಪ್ರತೀಕ್ ಬಾಯಲ್, ಸಿಪಿಒ ಉದಯ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಗೀತಾ ವಾಗ್ಳೆ, ಪ್ರಶಾಂತ್ ಜತ್ತನ್, ತಾಲೂಕು ಸಮಿತಿಯ ಅಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಸರ್ಕಾರಿ ಬಸ್ಸು ಪುನರಾರಂಭ

ಗ್ರಾಮೀಣ ಪ್ರದೇಶದ ಜನರ ಬೇಡಿಕೆಯಂತೆ ಗೋಳಿಯಂಗಡಿ-ವಡ್ಡರ್ಸೆ-ಕುಂದಾಪುರ ಮಾರ್ಗದಲ್ಲಿ ಹೊಸ ಸರ್ಕಾರಿ ಬಸ್ಸುಗಳನ್ನು ಓಡಿಸಲಾಗುತ್ತಿದೆ. ಕೊರೋನಾ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಕೋಡಿಬೆಂಗ್ರೆ, ಬ್ರಹ್ಮಾವರ, ಹೆಬ್ರಿ, ಪೆರ್ಣಂಕಿಲ, ತಲ್ಲೂರು, ಮಾವಿನಕಟ್ಟೆ, ನೇರಳಕಟ್ಟೆ, ಬೈಂದೂರು, ಪಡುವರಿ. ಸೋಮೇಶ್ವರ, ದೊಂಬೆ, ಶಿರೂರು, ನಾಡಾ, ಬಡಾಕೆರೆ ಮಾರ್ಗಗಳ ಬಸ್ಸುಗಳನ್ನು ಜಿಲ್ಲಾ ಹಾಗೂ ತಾಲೂಕು ಅನುಷ್ಠಾನ ಸಮಿತಿಗಳ ಸತತ ಅನುಸರಣೆಯಿಂದ ಕಾರ್ಯಾರಂಭಗೊಂಡಿವೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ