ಕನ್ನಡಪ್ರಭ ವಾರ್ತೆ ಪಾವಗಡ ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ಪಾವಗಡ ನಗರ ಹಾಗೂ ತಾಲೂಕಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಹೀಗಾಗಿ ಪಟ್ಟಣದ ನಾಯಕ್ ಏಜೆನ್ಸಿ ಮುಂದೆ ಖರೀದಿಗೆ ಗ್ರಾಹಕರು ಮುಗಿಬಿದ್ದ ದೃಶ್ಯ ಶುಕ್ರವಾರ ಕಂಡು ಬಂದಿತು.
ಈ ವೇಳೆ ಇಂಡಿಯನ್ ಗ್ಯಾಸ್ ಮಾಲಿಕ ಕಾರ್ತಿಕ್ ಪ್ರತಿಕ್ರಿಯಿಸಿ, ಸಿಲಿಂಡರ್ ದಾಸ್ತಾನದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಮಗೆ ಬರಬೇಕಾಗಿರುವ ಗ್ಯಾಸ್ ಸಿಲಿಂಡರ್ ಬಂದಿದೆ. ಆತಂಕ ಪಡುವ ಅಗತ್ಯವಿಲ್ಲ.ಸರ್ವರ್ ಸಮಸ್ಯೆಯಿಂದ ವಿಳಂಬವಾಗುತ್ತಿದೆ. ಒಟಿಪಿ ಬಂದಿರುವ ಎಲ್ಲಾ ಗ್ರಾಹಕರಿಗೂ ಸರ್ವರ್ ಬಂದ ನಂತರ ಸಿಲಿಂಡರ್ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.ಈ ಕುರಿತು ಸ್ಥಳಕ್ಕೆ ಬಂದ ತಹಸೀಲ್ದಾರ್ ರವಿ, ಜನರನ್ನು ಸಮಾಧಾನಗೊಳಸಿ ಮಾತನಾಡಿ, ಗ್ಯಾಸ್ ಅಭಾವದ ನಡುವೆ ದುಬಾರಿ ದರಕ್ಕೆ ಸಿಲಿಂಡರ್ ಮಾರಾಟವಾಗುತ್ತಿರುವ ಆರೋಪಗಳು ಕೇಳಿಬಂದಿದ್ದು, ಈ ಮಧ್ಯೆ ಹೋಟೆಲ್, ಟೀ ಶಾಪ್ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಮನೆ ಬಳಕೆಯ ಸಿಲಿಂಡರ್ಗಳನ್ನು ಬಳಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಬಳಸಿದ್ರೆ ಸಿಲಿಂಡರ್ಗಳನ್ನು ಸೀಜ್ ಮಾಡಿ, ಕಟ್ಟುನಿಟ್ಟಿನ ಕಾನೂನು ಕ್ರಮ ಜರುಸಲಾಗುವುದು. ಪ್ರಸ್ತುತ ಜಾಗತಿಕ ರಾಜಕೀಯ ಪರಿಸ್ಥಿತಿಗಳಿಂದ ಇಂಧನ ಪೂರೈಕೆಯಲ್ಲಿ ಅಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಿದೆ. ಆದರೆ, ಪಾವಗಡ ತಾಲೂಕಿನಲ್ಲಿ ಅಡುಗೆ ಅನಿಲ ಸಿಲಿಂಡರ್ಗಳು ಅವಶ್ಯಕತೆಗೆ ತಕ್ಕಂತೆ ಸರಬರಾಜು ಆಗುತ್ತಿವೆ. ಸಾರ್ವಜನಿಕರು ಯಾವುದೇ ಆಂತಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ತೈಲ ಕಂಪನಿಗಳಿಂದ ಅಡುಗೆ ಅನಿಲ ಸಿಲಿಂಡರ್ಗಳು ಸರಬರಾಜು ಆಗುತ್ತಿದ್ದು, ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿ ಕೊಡಬಾರದು. ತಾಲೂಕಿನಲ್ಲಿನ ಹೋಟೆಲ್, ಬೇಕರಿ, ಬೀದಿ ಬದಿ ವ್ಯಾಪಾರಿಗಳು ಗೃಹ ಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಬಳಕೆಗಾಗಿ ಉಪಯೋಗಿಸುವುದು ಕಂಡುಬಂದಲ್ಲಿ, ಅಂತಹವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.