ಬಳ್ಳಾರಿ: ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಇತ್ತೀಚೆಗೆ ಸೂರ್ಯ ಕಲಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗೆಜ್ಜೆಪೂಜೆ ಹಾಗೂ ನೃತ್ಯ ಪ್ರದರ್ಶನ ಕಾರ್ಯಕ್ರಮವು ಸಾಂಸ್ಕೃತಿಕ ಸೊಬಗಿನಿಂದ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಗಾದೆಪ್ಪ ಸೂರ್ಯಕಲಾ ಟ್ರಸ್ಟ್ನ ಮುಖ್ಯಸ್ಥ ಹಾಗೂ ನೃತ್ಯ ತರಬೇತುದಾರ ಕೆ.ಸಿ. ಅಭಿಷೇಕ್ ಮಾರ್ಗದರ್ಶನದಿಂದ ಬಳ್ಳಾರಿ ನಗರದಲ್ಲಿ ನೂರಾರು ಬಾಲಕ-ಬಾಲಕಿಯರು ನೃತ್ಯ ಕಲಿಯುವ ಜತೆಗೆ ಸಾಂಸ್ಕೃತಿಕ ಸಂಸ್ಕಾರ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವ ಕೆಲಸವೂ ಇಂತಹ ಕಲಾ ಸಂಸ್ಥೆಗಳಿಂದ ನಡೆಯುತ್ತಿದೆ. ನೃತ್ಯ ಕೇವಲ ಮನರಂಜನೆಯ ಕಲೆಯಲ್ಲ. ಅದು ಶಿಸ್ತು, ಏಕಾಗ್ರತೆ, ಸಮಯಪ್ರಜ್ಞೆ ಹಾಗೂ ಆತ್ಮವಿಶ್ವಾಸ ಬೆಳೆಸುವ ಮಾಧ್ಯಮವಾಗಿದೆ. ಈ ನಿಟ್ಟಿನಲ್ಲಿ ಸೂರ್ಯಕಲಾ ಟ್ರಸ್ಟ್ನ ಕಾರ್ಯ ಶ್ಲಾಘನೀಯ ಎಂದರು.ಆರ್.ಕೆ. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ನಾರಾ ಚರಂತಿ ಮಾತನಾಡಿ, ಸೂರ್ಯಕಲಾ ಟ್ರಸ್ಟ್ ಹಲವು ವರ್ಷಗಳಿಂದ ಮಕ್ಕಳಿಗೆ ನೃತ್ಯ ತರಬೇತಿ ನೀಡುವ ಮೂಲಕ ಕಲಾ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದೆ. ಮಕ್ಕಳ ಪ್ರತಿಭೆಗೆ ಸೂಕ್ತ ಮಾರ್ಗದರ್ಶನ ದೊರೆತಾಗ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈ ಕಾರ್ಯ ಟ್ರಸ್ಟ್ ಮುಂದುವರಿಸಲಿ ಎಂದು ಆಶಿಸಿದರು.
ಮಕ್ಕಳನ್ನು ಮೊಬೈಲ್, ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೂರವಿಟ್ಟು ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಸೃಜನಶೀಲ ಚಟುವಟಿಕೆಗಳತ್ತ ಪೋಷಕರು ಪ್ರೋತ್ಸಾಹಿಸಬೇಕು. ಮಕ್ಕಳ ಪ್ರತಿಭೆ ಗುರುತಿಸಿ ಬೆಳೆಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ ಎಂದರು.
ಸೂರ್ಯಕಲಾ ಟ್ರಸ್ಟ್ನ ಮುಖ್ಯಸ್ಥ ಕೆ.ಸಿ. ಅಭಿಷೇಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಕಲಾಸಕ್ತಿ ಬೆಳೆಸುವುದು ಹಾಗೂ ಅವರಿಗೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮಾಡಿಸುವುದು ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಬಿ. ರೂಪಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಪೋಷಕರು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಕ್ಕಳ ನೃತ್ಯ ಪ್ರದರ್ಶನ ವೀಕ್ಷಿಸಿದರು.