ದಾವಣಗೆರೆ: ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸೆಕ್ಷನ್ 4 ಆಗಿರುವ ಕಂದಾಯ ಭೂಮಿಯನ್ನು ಸೆಕ್ಷನ್ 17 ಮಾಡಿ, ಅರಣ್ಯ ಎಂದು ಘೋಷಿಸಲು ತ್ವರಿತ ಕ್ರಮ ಕೈಗೊಳ್ಳಬೇಕು. ಹವಾಮಾನ ಬದಲಾವಣೆಯ ಪ್ರಸಕ್ತ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳವೇ ಪರಿಹಾರವಾಗಿದೆ. ಮುಂಬರುವ ವನಮಹೋತ್ಸವ ಸಂದರ್ಭ ರಸ್ತೆಯ ಎರಡೂ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಟ್ಟು ಪೋಷಿಸುವಂತೆ ತಿಳಿಸಿದರು.
ವಾಯುಮಾಲಿನ್ಯ ನಿಯಂತ್ರಣಕ್ಕೆ ಸೂಚನೆ:ದಾವಣಗೆರೆಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ದೂರುಗಳು ಬಂದಿವೆ. ಇದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ದೈನಂದಿನ ಆಧಾರದಲ್ಲಿ ವಾಯು ಮಾಲಿನ್ಯದ ಪರಿಶೀಲನೆ ನಡೆಸಿ ಹೆಚ್ಚು ಮಾಲಿನ್ಯ ಇರುವ ಪ್ರದೇಶದಲ್ಲಿ ಅದನ್ನು ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಸ್ಥಳೀಯ ಸಂಸ್ಥೆಗೆ ಸೂಚನೆ ನೀಡಲು ತಿಳಿಸಿದರು.
ಜಿಲ್ಲೆಯ ಕೆಲವು ಕೈಗಾರಿಕೆಗಳಿಂದ ನದಿಗೆ ಮಾಲಿನ್ಯ ನೀರು ಹರಿಯುತ್ತಿದೆ ಎಂಬ ದೂರುಗಳಿವೆ. ಜಲಮೂಲಗಳು ಕಲುಷಿತವಾಗದಂತೆ ಆ ಕೈಗಾರಿಕೆಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲು ಪರಿಸರ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಇದಕ್ಕೂ ಮುನ್ನ ಪರಿಸರ ಇಲಾಖೆಯ ವಾಯು ಮಾಲಿನ್ಯ ನಿಗಾ ಮತ್ತು ಪರೀಕ್ಷಾ ಪ್ರಯೋಗಾಲಯ, ತ್ಯಾಜ್ಯ ಜಲ ಸಂಸ್ಕರಣಾ ಘಟಕ ಹಾಗೂ ನರ್ಸರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.- - -
-15ಕೆಡಿವಿಜಿ40, 41:ದಾವಣಗೆರೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.