ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ನೀಡುವ ಮೂಲಕ ಹೆಚ್ಚು ಅಂಕಗಳನ್ನು ಪಡೆಯುವ ಪ್ರಯತ್ನಿಸಿಬೇಕು. ಹಿಂದಿನ ವರ್ಷಕ್ಕಿಂತ ಈ ವರ್ಷ ಪ್ರಶ್ನೆ ಪತ್ರಿಕೆ ಮಾದರಿ ಬದಲಾಗಿದೆ, ಅಯಾ ವಿಷಯಗಳನ್ನು ಚೆನ್ನಾಗಿ ಅಭ್ಯಾಸ ಮಾಡಿ. ನಿಮ್ಮದೇ ಆದ ಒಂದು ವೇಳಾಪಟ್ಟಿಯನ್ನು ಹಾಕಿಕೊಂಡು ಉತ್ತಮ ಅಂಕಗಳನ್ನು ಗಳಿಸಿ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ವಿದ್ಯಾರ್ಥಿಗಳು ಏಕಾಗ್ರತೆಗೆ, ಜ್ಞಾನಾರ್ಜನೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೆ.ವಿ. ಮತ್ತು ಪಂಚಗಿರಿ ವಿದ್ಯಾದತ್ತಿಗಳ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ತಿಳಿಸಿದರು.
ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ,ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಹೊಂದಿ ಸಂಸ್ಕಾರವಂತರಾಗಿ ಸಮಾಜಮುಖಿಯಾಗಿ ಬದುಕಬೇಕು ಎಂದು ಸಲಹೆ ನೀಡಿದರು.
ಮಕ್ಕಳಿಗೆ ಶಿಕ್ಷಕರ ಭಯ ಇಲ್ಲ
ಹಿಂದೆ ವಿದ್ಯಾರ್ಥಿಗಳು ಶಿಕ್ಷಕರಿಗೆ ಭಯಪಡುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಬೇರೆಯೇ ಇದೆ. ಶಿಕ್ಷೆಯಿಲ್ಲದ ವಿದ್ಯಾಭ್ಯಾಸ ವಿದ್ಯಾರ್ಥಿಗಳನ್ನು ದಾರಿತಪ್ಪಿಸುತ್ತಿದೆ. ವಿದ್ಯಾರ್ಥಿಗಳು ಸರಿ ಮಾರ್ಗದಲ್ಲಿ ನಡೆದು ತಂದೆ ತಾಯಿ ಮತ್ತು ಗುರುಗಳಿಗೆ ಗೌರವ ತರಬೇಕು ಎಂದು ಕಿವಿಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಅವರು ಮಾತನಾಡಿ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ನೀಡುವ ಮೂಲಕ ಹೆಚ್ಚು ಅಂಕಗಳನ್ನು ಪಡೆಯುವ ಪ್ರಯತ್ನಿಸಿಬೇಕು. ಹಿಂದಿನ ವರ್ಷಕ್ಕಿಂತ ಈ ವರ್ಷ ಪ್ರಶ್ನೆ ಪತ್ರಿಕೆ ಮಾದರಿ ಬದಲಾಗಿದೆ, ಅಯಾ ವಿಷಯಗಳನ್ನು ಚೆನ್ನಾಗಿ ಅಭ್ಯಾಸ ಮಾಡಿ. ನಿಮ್ಮದೇ ಆದ ಒಂದು ವೇಳಾಪಟ್ಟಿಯನ್ನು ಹಾಕಿಕೊಂಡು ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ ಹೆಸರು ತರಬೇಕೆಂದು ಕಿವಿಮಾತು ಹೇಳಿದರು. ಪೋಷಕರು ಕಾಳಜಿ ವಹಿಸಲಿ
ಬೆಂಗಳೂರು ಉತ್ತರ ವಿವಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶಂಕರ್ ಮಾತನಾಡಿ, ಶಿಕ್ಷಕರು ಹೇಳಿದ ವಿಷಯಗಳನ್ನ ಗಮನಿಸಿ, ಹೆಚ್ಚಿನ ಸಮಯವನ್ನು ಓದುವುದರ ಕಡೆಗೆ ಕೊಡಿ, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮ ಬೇಕು. ಪೋಷಕರಿಗೆ ಮಕ್ಕಳ ಮೇಲೆ ಕಾಳಜಿ ಇರಬೇಕು ಎಂದು ತಿಳಿಸಿದರು. 65 ವಿದ್ಯಾರ್ಥಿಗಳಿಗೆ ಪುರಸ್ಕಾರ
ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶೇಣಿಯಲ್ಲಿ ತೇರ್ಗಡೆಯಾಗಿದ್ದ 10 ಜನ ವಿದ್ಯಾರ್ಥಿಗಳಿಗೆ ಸಂಸ್ಥಾಪಕ ಸಿ.ವಿ.ವೆಂಕಟರಾಯಪ್ಪನವರ ಧರ್ಮಪತ್ನಿ ಸಿ.ವಿ.ಕಮಲಮ್ಮನವರ ಹೆಸರಿನಲ್ಲಿ ಮತ್ತು ಬಡ ವಿದ್ಯಾರ್ಥಿಗಳ ನಿಧಿಯಿಂದ 65 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಈ ವೇಳೆ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ದತ್ತಿ ಸದಸ್ಯರಾದ ಬಿ.ಮುನಿಯಪ್ಪ, ಕೆ.ವಿ.ನಿರ್ಮಲಾ ಪ್ರಭು, ವಿಜಯಲಕ್ಷ್ಮಿ,ಶ್ರೀನಿವಾಸ, ಆಡಳಿತ ಅಧಿಕಾರಿ ಸಾಯಿ ಪ್ರಭು, ಮ್ಯಾನೇಜರ್ ಲಕ್ಷ್ಮಣಸ್ವಾಮಿ, ಮುಖ್ಯ ಶಿಕ್ಷಕ ಎಂ.ನಾರಾಯಣಸ್ವಾಮಿ,ಶಿಕ್ಷಕರಾದ ಗುಂಪುಮರದ ಆನಂದ್, ಪೋಷಕರು, ವಿದ್ಯಾರ್ಥಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.