ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಶಾಸಕರು ಮಾತನಾಡಿ, ಈ ದಸರಾವನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸ್ಥಳೀಯ ಕಲಾವಿದರು, ಯುವ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ಸಂಭ್ರಮ ಆಚರಣೆ, ಕ್ರೀಡಾ ದಸರಾದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ, ಶಾಲಾ ಮಕ್ಕಳಿಗಾಗಿ ಸಿನಿಮೋತ್ಸವ, ದಸರಾ ಯಶಸ್ಸು, ಸಿದ್ಧತೆಗಾಗಿ ವಿವಿಧ ಸಮಿತಿಗಳ ರಚನೆ, ಮಹಿಳೆಯರ ಕೌಶಲ್ಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದು ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಜನಪರ ಉತ್ಸವವಾಗಲಿ:ದಸರಾವನ್ನು ಕೇವಲ ಉತ್ಸವದ ಆಚರಣೆಗೆ ಸೀಮಿತವಾಗದೆ ಎಲ್ಲ ವರ್ಗದ ಜನರು ಭಾಗವಹಿಸುವಂಥ ಜನಪರ ಮಹೋತ್ಸವವಾಗಬೇಕು. ಸಾರ್ವಜನಿಕರಿಗೆ ಹೊಸ ಅನುಭವ ನೀಡುವ ರೀತಿ ವೈವಿಧ್ಯಮಯ ಹಾಗೂ ವಿನೂತನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.
ಯುವ ಪ್ರತಿಭೆಗಳಿಗೆ ಪ್ರೋತ್ಸಾಹ:
ತಾಲೂಕಿನ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ವಿವಿಧ ಸಾಂಸ್ಕೃತಿಕ ಹಾಗೂ ಪ್ರತಿಭಾ ಪ್ರದರ್ಶನ ಆಯೋಜಿಸಿ ಯುವಜನರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು, ಮಕ್ಕಳಿಗೆ ಉತ್ತಮ ಹಾಗೂ ಸಂದೇಶಾತ್ಮಕ ಚಲನಚಿತ್ರಗಳನ್ನು ವೀಕ್ಷಿಸಲು ಸಿನಿಮೋತ್ಸವ ಆಯೋಜನೆ, ಈ ಬಗ್ಗೆ ಶಾಲಾ ಮಕ್ಕಳಿಗೆ ಚಲನಚಿತ್ರ ಪ್ರದರ್ಶನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಡೀಸಿ ಡಾ.ಕುಮಾರ್ ಮಾತನಾಡಿ, ಶ್ರೀರಂಗಪಟ್ಟಣ ದಸರಾ ಯಶಸ್ವಿಗಾಗಿ 12 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಸಮಿತಿಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಮಿತಿಗಳಿಗೆ ನೇಮಕಗೊಂಡಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ದಸರಾ ಮಹೋತ್ಸವದ ವೇಳೆ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ದಸರಾಗೆ ಆಗಮಿಸುವ ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಗ್ಯಾಲರಿ ಹಾಗೂ ವಿವಿಧ ಉತ್ಪನ್ನಗಳ ಮಳಿಗೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಮಳಿಗೆಗಳಲ್ಲಿ ಸ್ಥಳೀಯ ಕಲೆ, ಕರಕುಶಲ ವಸ್ತುಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಸ್ಥಳೀಯ ಪ್ರತಿಭೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಬೇಕು ಎಂದು ಹೇಳಿದರು.