ಡೆಂಘೀ ಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆಪಡೆಯಿರಿ

KannadaprabhaNewsNetwork | Published : May 23, 2024 1:00 AM

ರಾಮನಗರ: ಹಗಲು ಹೊತ್ತಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಘೀ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.

ರಾಮನಗರ: ಹಗಲು ಹೊತ್ತಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಘೀ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ವಿಪರೀತ ಜ್ವರ, ಮೈಮೇಲೆ ಕೆಂಪು ಗಂದೆಗಳು, ಕಣ್ಣಿನ ಹಿಂಭಾಗ ನೋವು, ತಲೆ ನೋವು, ಮಾಂಸಖಂಡಗಳ ನೋವು, ಈ ರೋಗದ ಪ್ರಮುಖ ಲಕ್ಷಣಗಳಾಗಿದ್ದು ರೋಗ ತೀವ್ರ ಸ್ಥಿತಿ ತಲುಪಿದಾಗ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಅಲ್ಲಲ್ಲಿ ರಕ್ತಸ್ರಾವದ ಗುರುತು ಕಾಣಿಸಿಕೊಳ್ಳುತ್ತವೆ. ಇಂತಹ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕೆ.ಶಶಿಧರ್ ತಿಳಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಡೆಂಘೀ ನಿಯಂತ್ರಣ ಕುರಿತು ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಉಮಾ ಮಾತನಾಡಿ, ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಘೀ ರೋಗದ ಹತೋಟಿಗೆ ಮುಖ್ಯ ವಿಧಾನ. ಈ ಸೊಳ್ಳೆಗಳು ನೀರು ಶೇಖರಣೆ ಪರಿಕರಗಳಾದ ಸಿಮೆಂಟ್ ತೊಟ್ಟಿ, ಬ್ಯಾರಲ್, ಮಣ್ಣಿನ ಮಡಿಕೆಗಳನ್ನು ವಾರಕೊಮ್ಮೆ ಸ್ವಚ್ಛಗೊಳಿಸಬೇಕು ಹಾಗೂ ಈಗಾಗಲೆ ಮಳೆ ಪ್ರಾರಂಭವಾಗಿದ್ದು ಘನತ್ಯಾಜ್ಯಗಳಾದ ಟೈರು, ಎಳನೀರ ಚಿಪ್ಪು, ಒಡೆದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಅನುಪಯುಕ್ತ ಒರಳುಕಲ್ಲು ಇವುಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿರುತ್ತದೆ. ಆದ್ದರಿಂದ ನೀರು ನಿಲ್ಲದಂತೆ ಕ್ರಮವಹಿಸಿ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಡಿಪೋಗಳಲ್ಲಿ ಬಳಸಲು ಯೋಗ್ಯವಲ್ಲದ ಟೈರ್‌ಗಳು ಮತ್ತು ಇತರೆ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಪ್ಲಾಸ್ಟಿಕ್‌ನಿಂದ ಸಂರಕ್ಷಿಸಿಡುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜೇಂದ್ರ, ಕೆಎಸ್‌ಆರ್‌ಟಿಸಿ ಕಾರ್ಮಿಕ ಅಧಿಕಾರಿ ಜಯರಾಂ, ಸಂಚಾರ ಅಧೀಕ್ಷಕಿ ಭಾಗ್ಯಮ್ಮ, ಕೀಟಶಾಸ್ತçಜ್ಞೆ ಸೌಮ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ದಾಸಪ್ಪ, ವಿಠಲ್, ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.22ಕೆಆರ್ ಎಂಎನ್ 6.ಜೆಪಿಜಿ

ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಡೆಂಘಿ ನಿಯಂತ್ರಣ ಕುರಿತು ಅರಿವು ಮೂಡಿಸಲಾಯಿತು.