ಕನ್ನಡಪ್ರಭ ವಾರ್ತೆ ಕೆ.ಆರ್.ನಗರ
ಕ್ಷೇತ್ರದ ವ್ಯಾಪ್ತಿಯಲ್ಲಿರುವ 6 ವಸತಿ ಶಾಲೆಗಳು ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ. 100 ಫಲಿತಾಂಶ ಗಳಿಸುವುದರ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ನಾವು 4ನೇ ಸ್ಥಾನ ಗಳಿಸಿದ್ದು, ಇದು ಎಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.ಪಟ್ಟಣದ ಆಂಜನೇಯ ಬಡಾವಣೆಯಲ್ಲಿ ಶುಕ್ರವಾರ ಸ್ಥಳಾಂತರಗೊಂಡ ಇಂದಿರಾಗಾಂಧಿ ವಸತಿ ಶಾಲೆ ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈ ಸಾಲಿನಲ್ಲಿ ನಾವು ಮತ್ತಷ್ಟು ಸಾಧನೆ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಗುರಿ ಹೊಂದಿದ್ದೇವೆ ಎಂದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಲ್ಲ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರ ಮತ್ತು ವಸತಿಯ ವ್ಯವಸ್ಥೆ ಮಾಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಂಡಿದ್ದು, ಈ ವಿಚಾರದಲ್ಲಿ ಯಾವುದೇ ದೂರುಗಳಿದ್ದರೂ ವಿದ್ಯಾರ್ಥಿಗಳು ನನಗೆ ನೇರವಾಗಿ ತಿಳಿಸಬೇಕೆಂದರು.ವಸತಿ ಶಾಲೆಯ ಉದ್ಘಾಟನೆ ನೆರವೇರಿಸಿದ ನಂತರ ಶಾಸಕರು, ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಾಡಿಗೆಗೆ ನೀಡಿರುವ ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೈ.ಎಸ್. ಕುಮಾರ್ ಅವರು ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕ ಹಾಗೆ ಎಲ್ಲ ಅನುಕೂಲಗಳನ್ನು ಕಲ್ಪಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ಮಾಜಿ ಅಧ್ಯಕ್ಷ ವೈ.ಎಸ್. ಕುಮಾರ್, ನಿರ್ದೇಶಕರಾದ ಕೆ.ಎನ್. ಪ್ರಸನ್ನ ಕುಮಾರ್, ಸರಿತಾ ಜವರಪ್ಪ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ. ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ನಟರಾಜು, ಶಂಕರಸ್ವಾಮಿ, ಶಂಕರ್ ಮಾಜಿ ಸದಸ್ಯ ಕೆ. ವಿನಯ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಚ್.ಪಿ. ಪ್ರಶಾಂತ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ. ಎಸ್. ಮಹದೇವ್, ಉದಯಶಂಕರ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ರಮೇಶ್, ಉಪ-ವಿಭಾಗಾಧಿಕಾರಿ ವಿಜಯಕುಮಾರ್, ಪುರಸಭೆ ಮುಖ್ಯಾಧಿಕಾರಿ ಬಿ.ವಿ. ವೆಂಕಟೇಶ್, ಮೇಲ್ವಿಚಾರಕರಾದ ಲೋಕೇಶ್, ಮದುಸೂಧನ್, ಪ್ರಾಂಶುಪಾಲೆ ಪವಿತಾ ಇದ್ದರು.