- ವಿಶ್ವ ಪರಿಸರ ದಿನ ಕಾರ್ಯಕ್ರಮ ಉದ್ಘಾಟಿಸಿ ನ್ಯಾ.ರಾಜೇಶ್ವರಿ ಎನ್. ಹೆಗಡೆ
ಹಣ, ಆಸ್ತಿ, ಸಂಪತ್ತು, ಚಿನ್ನಾಭರಣ ಸೇರಿದಂತೆ ಜೀವನಕ್ಕೆ ಅತ್ಯವಶ್ಯಕ ವಸ್ತುಗಳನ್ನು ಸಂಗ್ರಹಿಸಿಡುವಂತೆ ನಮ್ಮ ಹಾಗೂ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕೊಡುಗೆಯಾಗಿ ಉಳಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ನಗರದ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ, ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗಿಡ, ಮರ, ಹೂವು, ಪಕ್ಷಿ, ಪ್ರಾಣಿ, ಗಾಳಿ, ನೀರು, ಬೆಳಕು ಇವೆಲ್ಲವೂ ಪರಿಸರವಾಗಿವೆ. ಇವೆಲ್ಲವುಗಳ ಸಂರಕ್ಷಣೆ ನಮ್ಮ ಗುರಿಯಾಗಬೇಕು. ನಗರೀಕರಣದ ಹೆಸರಲ್ಲಿ ಕಾಡು, ಮರಗಳನ್ನು ನಾಶಪಡಿಸಲಾಗುತ್ತಿದೆ. ಮಾಲಿನ್ಯ, ವಾಯುಮಾಲಿನ್ಯ, ಶಬ್ಧ ಮಾಲಿನ್ಯಗಳು ಸಹ ಪರಿಸರ ನಾಶಕ್ಕೆ ಕಾರಣವಾಗಿದೆ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡುವುದಲ್ಲ. ಅದನ್ನು ಕೃತಿಗೆ ತರಬೇಕು. ನಿರಂತರ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ, ಹಿರಿಯ ವಕೀಲ ಎಲ್.ಎಚ್. ಅರುಣಕುಮಾರ ಮಾತನಾಡಿದರು. ಎಂಎಂ ಶಿಕ್ಷಣ ಮಹಾವಿದ್ಯಾಲಯ ಸಲಹಾ ಸಮಿತಿ ಉಪಾಧ್ಯಕ್ಷ ಪ್ರೊ.ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಜಿ.ಕೊಟ್ರೇಶ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಗೌರವಾಧ್ಯಕ್ಷ ಡಾ. ಜೆ.ಬಿ.ರಾಜು, ಎಂ.ಎಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಕೆ.ಟಿ. ನಾಗರಾಜ ನಾಯ್ಕ ಇತರರು ಇದ್ದರು.
- - - -5ಕೆಡಿವಿಜಿ2:ದಾವಣಗೆರೆ ಎಂ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಪರಿಸರ ದಿನ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಮಹಾವೀರ ಮ.ಕರೆಣ್ಣನವರ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.