ಹಾವೇರಿ: ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಅದರಂತೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯುತವಾಗಿ ವರದಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯು ಕಾಟಾಚಾರಕ್ಕೆ ನೀಡುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಆಸಕ್ತಿಯಿಂದ ನಿಖರವಾದ ಮಾಹಿತಿ ಸಲ್ಲಿಸಲು ಕ್ರಮ ವಹಿಸಬೇಕು ಎಂದರು.ಶಕ್ತಿ ಯೋಜನೆಯಲ್ಲಿ ಮೇ ಅಂತ್ಯದ ವರೆಗೆ 120.36 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸಂಚಾರ ಮಾಡಿದ್ದಾರೆ. ಹಾವೇರಿ ವಿಭಾಗಕ್ಕೆ 86 ನೂತನ ಬಸ್ಗಳನ್ನು ನೀಡಲಾಗಿದೆ. ಬಸ್ಗಳ ಅವಶ್ಯಕತೆ ಇದ್ದಲ್ಲಿ ಹೊಸ ಬಸ ಖರೀದಿಗೆ ಟೆಂಡರ್ ಕರೆಯಬೇಕು. ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿಲ್ದಾಣದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 4,15,040 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 4,00,769 ನೋಂದಣಿಯಾದವರು ಗೃಹಜ್ಯೋತಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಅಪಘಾತ ವಲಯಗಳಲ್ಲಿ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಿದ್ದಿರಿ. ಈ ಬಗ್ಗೆ ದೂರುಗಳು ಬರುತ್ತಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಿ ಸೂಕ್ತ ಸ್ಥಳದಲ್ಲಿ ಅಳವಡಿಸಬೇಕು. ವಿದ್ಯುತ್ ಕಂಬಗಳು ಹಾಳಾಗಿದ್ದು, ಗುಣಮಟ್ಟದ ಕಂಬಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ 3,97,816 ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗಳಿದ್ದು, ಇದರಲ್ಲಿ 3,63,888 ಪಡಿತರ ಚೀಟಿಗಳು ಡಿಬಿಟಿಗೆ ಅರ್ಹವಿದ್ದು, ಡಿಸೆಂಬರ್ ವರೆಗೆ ಒಟ್ಟು ₹21.45 ಕೋಟಿ ಮೊತ್ತವನ್ನು ಪಾವತಿಸಲಾಗಿದೆ. ಜನವರಿ ತಿಂಗಳ ಡಿಬಿಟಿ ಹಣ ಪಾವತಿಸುವುದು ಬಾಕಿ ಇದ್ದು, ಫೆಬ್ರವರಿಯಿಂದ ನಗದು ಬದಲಾಗಿ 5 ಕೆಜಿ ಅಕ್ಕಿಯನ್ನು ವಿತರಿಸಲು ಕ್ರಮ ವಹಿಸಲಾಗಿದೆ. ನಾಲ್ಕು ತಿಂಗಳಲ್ಲಿ ಒಟ್ಟು 265250 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಅನಧಿಕೃತ ಪಡಿತರ ಚೀಟಿಗಳು ಹೆಚ್ಚಾಗಿದ್ದು, ಇದನ್ನು ತಡೆಯಲು ಕ್ರಮ ವಹಿಸಬೇಕು. ಅನಧಿಕೃತ ಪಡಿತರ ಚೀಟಿಗಳನ್ನು ತೆರವುಗೊಳಿಸಲು ಸರ್ಕಾರ ಹೊರಡಿಸಿರುವ ಮಾನದಂಡಗಳನ್ನು ಅನುಸರಿಸಿ ಒಂದು ಸಮಿತಿ ರಚಿಸಿ ಸಾಧಕ- ಬಾಧಕಗಳನ್ನು ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ₹139.51 ಕೋಟಿ ಸಂದಾಯ ಮಾಡಲಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಫೆಬ್ರವರಿ ಮತ್ತು ಮಾರ್ಚ್ 2025ರ ಮಾಹೆಯನ್ನು ಹೊರತುಪಡಿಸಿ ಏಪ್ರಿಲ್ವರೆಗೆ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಆಗಿರುವ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿ ಫೆಬ್ರವರಿ ಮತ್ತು ಮಾರ್ಚ್ ಮಾಹೆಯ ಹಣವನ್ನು ಸಂದಾಯ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದರು.ಯುವನಿಧಿ ಯೋಜನೆಯಲ್ಲಿ ಫೆಬ್ರವರಿ ಅಂತ್ಯದವರೆಗೆ 7113 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 5103 ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಫಲನುಭವಿಗಳ ವಿವರ ಪಡೆದು ಅವರಲ್ಲಿ ಕೆಲಸ ಪಡೆದುಕೊಂಡಿರುವವರನ್ನು ಗುರುತಿಸಿ ಅವರನ್ನು ಈ ಯೋಜನೆಯಿಂದ ಮುಕ್ತಗೊಳಿಸಿ ಬೇರೆ ಫಲಾನುಭವಿಗಳಿಗೆ ಅವಕಾಶ ಮಾಡಿಕೊಡುವ ಕೆಲಸವಾಗಬೇಕು ಎಂದರು.ಇದೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಾದ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಪಂ ಉಪಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.