ರೋಣ: ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದ ಮೊದಲ ಹಂತದಲ್ಲೆ ಸಚಿವ ಸ್ಥಾನ ನೀಡದಿರುವದು ಬೇಸರ ತಂದಿದ್ದು, 2ನೇ ಹಂತದಲ್ಲಾದರೂ ಸಚಿವ ಸ್ಥಾನ ನೀಡಬೇಕು ಎಂದು ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಡಾ. ವೈ.ಎನ್. ಪಾಪಣ್ಣವರ ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದ ಶಿಕ್ಷಣ ಕ್ರಾಂತಿಗೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾಗಿದೆ. ಸುದೀರ್ಘ ರಾಜಕೀಯ ಇತಿಹಾಸ ಹೊಂದಿದ್ದರೂ ಸದಾ ಸರಳತೆ ಕಾಯ್ದುಕೊಂಡಿದ್ದಾರೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ತಮ್ಮ ಅಧಿಕಾರ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಸರ್ಕಾರಿ ಶಾಲೆ, ಕಾಲೇಜುಗಳ ಮೂಲ ಸೌಕರ್ಯ ಮೇಲ್ದರ್ಜೆಗೆ ಏರಿಸಲು ಶ್ರಮಿಸಿದ್ದಾರೆ. ಇಂತಹ ಶಿಕ್ಷಣಪ್ರೇಮಿ ಸಚಿವರಾದರೆ ಇಡೀ ರಾಜ್ಯದ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಶಕ್ತಿ ಬರಲಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.ಕ್ಷೇತ್ರದಲ್ಲಿ ಸಹಸ್ರಾರು ಕೆರೆಗಳ ಹೂಳೆತ್ತುವಿಕೆ, ನೀರಾವರಿ ಯೋಜನೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಕ್ಷೇತ್ರದ ಶೈಕ್ಷಣಿಕ ಮತ್ತು ಸಾಮಾಜಿಕ ಸುಧಾರಣೆಗೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿರುವ ಜಿ.ಎಸ್. ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದ್ದಾರೆ. ರೋಣ ಶಾಸಕರಿಗೆ ಸಚಿವ ಸ್ಥಾನ ನೀಡಲು ಮನವಿ
ಗದಗ: ರೋಣ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರೋಣ ತಾಲೂಕು ಘಟಕದ ಅಧ್ಯಕ್ಷ ಅನೀಲಕುಮಾರ ತೆಗ್ಗಿನಕೇರಿ ಆಗ್ರಹಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಆ ವಿಶ್ವಾಸವನ್ನು ಘಾಸಿಗೊಳಿಸಿದರೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಜತೆಗೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ಎಸ್. ಮಲ್ಲಾಪೂರ, ಸಿದ್ದರಾಮಗೌಡ ಜೀವನಗೌಡರ, ಮಂಜುಳಾ ರೇವಡಿ, ರೇಣುಕ ಧರ್ಮಾಯತ, ಮಲ್ಲಿಕಾರ್ಜುನ ರಡ್ಡೇರ, ವಿಜಯಕುಮಾರ ಪಾಟೀಲ, ಶರಣು ಪಾಟೀಲ, ಮಂಜುನಾಥ ಅಂಗಡಿ ಸೇರಿ ಹಲವರಿದ್ದರು.