ಕಂಪ್ಲಿ: ಭಾರತ್ ಜೋಡೋ ಯುವಕರ ಸಂಘದಂತಹ ಹೊಸ ಯೋಜನೆಗಳನ್ನು ಕೈಬಿಟ್ಟು, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಿ ಅವುಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಸಿ.ಎ. ಚನ್ನಪ್ಪ ಆಗ್ರಹಿಸಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಮೂಲಕ ಸ್ವಯಂ ಉದ್ಯೋಗ, ಶಿಕ್ಷಣ, ಸಾಲಸೌಲಭ್ಯ, ಕೌಶಲಾಭಿವೃದ್ಧಿ ಸೇರಿದಂತೆ ಅನೇಕ ಯೋಜನೆಗಳು ಜಾರಿಯಲ್ಲಿವೆ. ಆದರೆ, ಈ ನಿಗಮಗಳಿಗೆ ಅಗತ್ಯ ಪ್ರಮಾಣದ ಅನುದಾನ ದೊರೆಯದ ಕಾರಣ ಅನೇಕ ಫಲಾನುಭವಿಗಳಿಗೆ ಯೋಜನೆಗಳ ಲಾಭ ಸಕಾಲದಲ್ಲಿ ಸಿಗುತ್ತಿಲ್ಲ ಎಂದು ಹೇಳಿದರು.
ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ, ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದು ಸರಿಯಲ್ಲ ಹಾಗೂ ಇದು ಖಂಡನೀಯ ಎಂದು ಆರೋಪಿಸಿದರು.ಸರ್ಕಾರ ಭಾರತ್ ಜೋಡೋ ಯುವಕರ ಸಂಘ ಯೋಜನೆಯನ್ನು ಮರುಪರಿಶೀಲಿಸಿ, ಆ ಹಣವನ್ನು ಈಗಿರುವ ಅಭಿವೃದ್ಧಿ ನಿಗಮಗಳಿಗೆ ಹಂಚಿಕೆ ಮಾಡುವ ಮೂಲಕ ಸಮಾಜದ ದುರ್ಬಲ ವರ್ಗಗಳ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.